ಮೈಸೂರು: ಸರಳ ಜಂಬೂಸವಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರು ಶುಭ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ಚಾಲನೆ ನೀಡಿದರು.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕ ಜಂಬೂಸವಾರಿಗೆ ಸಿಎಂ ಯಡಿಯೂರಪ್ಪ, ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್, ಮೇಯರ್ ತಸ್ನೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅರಮನೆ ಮುಂಭಾಗದ ವೇದಿಕೆಯಲ್ಲಿ ಚಿನ್ನದ ಅಂಬಾರಿ ಹೊತ್ತು ಬಂದ ಅಭಿಮನ್ಯು ಮೇಲಿರುವ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳ ಜಂಬೂಸವಾರಿಗೆ ಚಾಲನೆ ನೀಡಿದರು. ಜಂಬೂಸವಾರಿ ಅರಮನೆ ಆವರಣದಲ್ಲಿ 400 ರಿಂದ 500 ಮೀಟರ್ ಕಲಾ ತಂಡಗಳು ಸಾಗಿ ಮೆರವಣಿಗೆ ಅಂತ್ಯಗೊಳ್ಳಲಿದೆ.
ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ ನಾದಸ್ವರ, ಕೊರೊನಾ ಜಾಗೃತಿ ಮೂಡಿಸಿದ ಸ್ತಬ್ಧ ಚಿತ್ರ, ಚಂಡಿಮೇಳ, ಮರದ ಕಾಲುವೇಷಧಾರಿ ತಂಡ, ವೀರಗಾಸೆ, ಚಿಲಿಪಿಲಿ ಗೊಂಬೆ, ಆನೆಗಾಡಿ, ಅಶ್ವದಳ ಮತ್ತು ಕೆ.ಎ.ಆರ್.ಪಿ. ಮೌಂಟೇನ್ ಕಂಪನಿ, ಪಿರಂಗಿ ಗಾಡಿಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದು, 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆಗೆ ಕುಮ್ಕಿ ಆನೆಗಳಾದ ಕಾವೇರಿ ಮತ್ತು ವಿಜಯ ಸಾಥ್ ನೀಡಿದವು.
ನಂದಿ ಧ್ವಜಕ್ಕೆ ಪೂಜೆ
ಸಿಎಂ ಯಡಿಯೂರಪ್ಪ ಅರಮನೆ ಬಲರಾಮ ದ್ವಾರದ ಮುಂಭಾಗದಲ್ಲಿರುವ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದ ಶುಭ ಮಕರ ಲಗ್ನದಲ್ಲಿ 2:59 ರಿಂದ 3:20 ರ ಶುಭ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.