ಮೈಸೂರು: ಸಮಾಜದಲ್ಲಿ ಏನಾದರೂ ಪರಿಣಾಮಕಾರಿಯಾಗಿ ಬದಲಾವಣೆ ತರಬೇಕೆಂದರೆ ಅದು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ. ಇದನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸಾಧ್ಯವಾಗಿಸಬಹುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಮೈಸೂರಿನ ಸರಗೂರು ತಾಲೂಕಿನ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಅತ್ಯಾಧುನಿಕ ಕೋವಿಡ್ ಕೇರ್ ಸೇಂಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಶಿಕ್ಷಣ ಕಲಿತ ನಂತರ ವಿದ್ಯಾರ್ಥಿಗಳು ಸಮಾಜಕ್ಕೆ ಏನು ಕೊಡುಗೆ ನೀಡಬೇಕು ಎಂಬ ಅರಿವಿರಬೇಕು. ಎಲ್ಲವನ್ನು ಕಲಿತು ಸ್ವಾರ್ಥದಿಂದ ಬದುಕಬಾರದು. ಏನೇ ಸಮಸ್ಯೆಗಳು ಕಂಡು ಬಂದರೂ ಶಿಕ್ಷಣದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಹೆಚ್.ಡಿ.ಕೋಟೆಯು ಹಿಂದುಳಿದ ಭಾಗವಾಗಿದ್ದು, ಇಂತಹ ಸಂಸ್ಥೆಯು ಕೋವಿಡ್ ಕಾಲದಂತಹ ಸಂಕಷ್ಟದಲ್ಲಿ ದೇಶಕ್ಕೆ ಹಾಗೂ ವಿಶ್ವಕ್ಕೆ ಮಾದರಿಯಾಗಿ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಉಸ್ತುವಾರಿ ಸಚಿವ ಸೋಮಶೇಖರ್ ಬಗ್ಗೆ ಮೆಚ್ಚುಗೆ
ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕೋವಿಡ್ ಕಾಲದಲ್ಲಿ ಸ್ವತಃ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಸರ್ವಾಂಗೀಣವಾಗಿ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಈ ಭಾಗದ ಜನರ ಸಮಸ್ಯೆಗಳನ್ನು ಹಾಗೂ ಕಷ್ಟಗಳಿಗೆ ಈ ಸಂಸ್ಥೆಯು ಉತ್ತಮವಾಗಿ ಸ್ಪಂದಿಸುತ್ತಿದ್ದು, ಇಲ್ಲಿನ ಜನರ ಸೇವೆಗಾಗಿ ಈ ಸಂಸ್ಥೆಯು ಹಾಗೂ ಸಂಸ್ಥೆಯ ಸಂಸ್ಥಾಪಕ ಡಾ. ಆರ್. ಬಾಲಸುಬ್ರಹ್ಮಣ್ಯಂ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದು ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಇಲ್ಲಿನ ಶಾಸಕರಾದ ಅನಿಲ್ ಚಿಕ್ಕಮಾದು, ತಮ್ಮ ತಂದೆಯಂತೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೇ ಸ್ವತಃ ಪ್ರವಾಸ ಕೈಗೊಂಡು ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಸಹ ಕೋವಿಡ್ ಕಾಲದಲ್ಲಿ 150 ಬೆಡ್ ವ್ಯವಸ್ಥೆಯುಳ್ಳ ಆಸ್ಪತ್ರೆಯನ್ನು ತೆರೆದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ 78ರಷ್ಟು ಲಸಿಕೆ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಶೀಘ್ರವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.