ಮೈಸೂರು: ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಇತರೆ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
![District Commissioner Abhiram G. Shankar](https://etvbharatimages.akamaized.net/etvbharat/prod-images/kn-mys-04-dc-pressnote-vis-ka10003_29062020181924_2906f_1593434964_697.jpg)
ಎಲ್ಲಾ ಸಾರ್ವಜನಿಕ ಮತ್ತು ಸರ್ಕಾರಿ ಕಚೇರಿಗಳಿಗೆ ಅತೀ ಅವಶ್ಯವಿರುವ ಹಾಗೂ ತುರ್ತು ಸಂದರ್ಭಗಳಲ್ಲಿ ಮಾತ್ರ ಭೇಟಿ ನೀಡುವುದು, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸುಗಳನ್ನು ಧರಿಸುವುದು ಹಾಗೂ ಕಚೇರಿ ಪ್ರವೇಶಿಸುವ ಮೊದಲು ಸಾರ್ವಜನಿಕರು ಕಡ್ಡಾಯವಾಗಿ ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ಬಳಸಿ ಶುಚಿಗೊಳಿಸುವುದು ಅವಶ್ಯಕವಾಗಿರುತ್ತದೆ.
ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಅವರ ಕುಟುಂಬದವರ ಆರೋಗ್ಯದ ಸುರಕ್ಷತೆಯ ಹಿತದೃಷ್ಟಿಯಿಂದ ಸಾರ್ವಜನಿಕರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.