ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ ಕಾರಂತರನ್ನು ಸರಿಗಟ್ಟುವ ಮತ್ತೊಬ್ಬ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೂ ಜ್ಞಾನಪೀಠ ಪ್ರಶಸ್ತಿ ಸಿಗಲಿ ಎಂದು ಮುಜರಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು.
ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್, ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಖಾಸಗಿ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಡೋಜ ಡಾ.ಎಸ್.ಎಲ್. ಭೈರಪ್ಪ ಅವರಿಗೆ 'ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ' ಪ್ರದಾನ ಮಾಡಲಾಯಿತು.
ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಿವರಾಮ ಕಾರಂತರು ಕಂಡಿದ್ದು ಕಂಡ ಹಾಗೇ ಹೇಳುತ್ತಾರೆ. ಬದುಕಿನ ಬಂಡಾಯಗಾರ. ಅದೇ ರೀತಿ ಭೈರಪ್ಪನವರು ನಿಷ್ಠುರವಾಗಿ ಸತ್ಯವನ್ನು ಹೇಳುತ್ತಾರೆ. ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಖುಷಿಯ ವಿಚಾರವಾಗಿದೆ ಎಂದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಶಿವರಾಮ ಕಾರಂತರು ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಿದರು. ಕೈಗಾ ಅಣುಸ್ಥಾವರ ವಿರುದ್ಧ ಜನಜಾಗೃತಿ ಮೂಡಿಸಿದರು ಎಂದು ಅವರ ಸಾಧನೆಯನ್ನು ಮೆಲುಕು ಹಾಕಿದರು.