ರಾಯಚೂರು : ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಕಾರಣಿಭೂತರಾದ 17 ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆಯ ವೇಳೆ 17 ಜನರಿಗೂ ಸಚಿವ ಸ್ಥಾನ ನೀಡಬೇಕು. ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಇಳಿಸಿ ಜನಪರ ಸರ್ಕಾರ ಸಂವಿಧಾನ ಬದ್ಧ ಸರ್ಕಾರಕ್ಕೆ ಅಧಿಕಾರ ಹಿಡಿಯುವಲ್ಲಿ 17 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾರಣವಾಗಿದ್ದಾರೆ. ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬಾರದೆಂದು ಯಾವುದೇ ಕೋರ್ಟ್ ಹೇಳಿಲ್ಲ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಂಗಳೂರು ಗಲಭೆ ಕುರಿತು ಸಿಡಿ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ಅಧಿಕಾರ ಕಳೆದುಕೊಂಡು ಅವರು ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾರೆ. ತಾವು ಒಬ್ಬ ಮಾಜಿ ಸಿಎಂ ಹಾಗೂ ರಾಜ್ಯದ ನಾಯಕ ಎನ್ನುವುದನ್ನು ತೋರಿಸಿಕೊಳ್ಳಲು ಹೀಗೆ ಹೇಳುತ್ತಿದ್ದಾರೆ. ಇಷ್ಟು ದಿನಗಳ ಬಳಿಕ ಸಿಡಿ ಬಿಡುಗಡೆ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ವ್ಯಂಗ್ಯವಾಡಿದರು.