ರಾಯಚೂರು: ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಅಲ್ಪಸಂಖ್ಯಾತರ ಕುರಿತ ಅವಹೇಳನಕಾರಿ ಹೇಳಿಕೆ ಖಂಡಿಸಿ ಅವರನ್ನು ಶಾಸಕ ಸ್ಥಾನದಿಂದ ಹಿಂಪಡೆಯಬೇಕೆಂದು ಇಂದು ಸಂವಿಧಾನ ಹಕ್ಕುಗಳ ನಾಗರಿಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ನಾಗರಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸೇರಿ ಸೋಮಶೇಖರ್ ರೆಡ್ಡಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಅವರ ಪ್ರತಿಕೃತಿ ದಹನ ಮಾಡಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ತಡೆದರು. ಬಳಿಕ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಆಗ ಪ್ರತಿಭಟನೆಯ ನೇತೃತ್ವವಹಿಸಿದ್ದ ಆರ್.ಮಾನಸಯ್ಯ, ರಾಯಚೂರು ಪೊಲೀಸರು ಶಾಸಕ ಸೋಮಶೇಖರ್ ರೆಡ್ಡಿ ವಿರುದ್ದ ಪ್ರಕರಣ ದಾಖಲಿಸಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ. ರಾಯಚೂರು ಎಸ್ಪಿ ರಾಜ್ಯ ಸರ್ಕಾರದಂತೆ ಮನುಸ್ಮೃತಿಗೆ ಒಳಗಾಗಿದ್ದಾರೆಂದು ಆರೋಪಿಸಿದರು. ನಂತರ ಮನುಸ್ಮೃತಿಯನ್ನು ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು.
ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈಗ ಮನುಸ್ಮೃತಿಗೆ ಒಳಗಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಖಂಡಿಸಿದರು.