ರಾಯಚೂರು: ಬೇಲಿಯೇ ಎದ್ದು ಹೊಲ ಮೇಯ್ದಂತಹ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಬಾಲಮಂದಿರದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಅಜಾದ್ ನಗರದಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಬಾಲಕಿಯರ ಬಾಲಮಂದಿರದಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಾಲಮಂದಿರದಲ್ಲಿ 16 ವರ್ಷದ ಬಾಲಕಿಯನ್ನ ಅದೇ ಕಚೇರಿಯಲ್ಲಿ ಪಿವಾನ್ ಆಗಿ ಕೆಲಸ ಮಾಡುತ್ತಿದ್ದ ಸಿದ್ದಯ್ಯ ಎನ್ನುವ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಬಾಲಕಿ ಕಳೆದ 8 ತಿಂಗಳನಿಂದ ಇಲ್ಲಿ ಆಶ್ರಯ ಪಡೆದಿದ್ದಳು. ಆದ್ರೆ ಅಲ್ಲಿನ ಸಿಬ್ಬಂದಿಯಾದ ಸಿದ್ದಯ್ಯ ತನ್ನ ಮನೆಯಲ್ಲಿ ಹುಟ್ಟುಹಬ್ಬವಿದೆ ಎಂದು ಮನೆಗೆ ಕರೆದುಕೊಂಡು ಹೋಗಿ ಈ ರೀತಿ ಮಾಡಿದ್ದಾನೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಆರೋಪಿ ಕಳೆದ ಐದಾರು ತಿಂಗಳಿಂದ ನಾಪತ್ತೆಯಾಗಿದ್ದಾನೆ.
ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದ್ದು, ತನಿಖೆ ನಂತರ ಸತ್ಯಾಂಶ ಬಯಲಿಗೆ ಬರಲಿದೆ.