ರಾಯಚೂರು: ರಾಜ್ಯದಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯಿಸಿ ಎಸ್ಎಫ್ಐ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಪದವೀಧರರ ಸಂಘದ ನೇತೃತ್ವದಲ್ಲಿ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಧರಣಿ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕುಳಿತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲು ಮುಂದಾದಾಗ ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ (MLISc) ವಿಷಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಆದರೆ ಅವರು ಉದ್ಯೋಗವಿಲ್ಲದೇ ಅಲೆದಾಡುವಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಗ್ರಂಥಪಾಲಕರ ಹುದ್ದೆ ಭರ್ತಿಮಾಡಬೇಕೆಂದು ಒತ್ತಾಯಿಸಿದರು.
ಅಂಕಿಅಂಶಗಳ ಪ್ರಕಾರ, ಕರ್ನಾಟಕ ಪದವಿ ಪೂರ್ವ ಕಾಲೇಜುಗಳಲ್ಲಿ 400 ಕ್ಕೂ ಹೆಚ್ಚು, ಪ್ರಥಮ ದರ್ಜೆ ಕಾಲೇಜುಗಳಲ್ಲಿ 300 ಕ್ಕೂ ಹೆಚ್ಚು, ರಾಜ್ಯದ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸೇರಿ ಒಟ್ಟು 6,402 ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿದರು.