ರಾಮನಗರ: ಜಿಲ್ಲೆಯಲ್ಲಿ ಮನೆಯಿಲ್ಲದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೂರು ಒದಗಿಸಲು ಅರ್ಹ ಫಲಾನುಭವಿಗಳನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಪಟ್ಟಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್. ಕೆ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಕಲ್ಪಿಸುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅರೆ ಅಲೆಮಾರಿ ಹಾಗೂ ಅಲೆಮಾರಿ ಜನಾಂಗದವರಿಗೆ ಮನೆ ಒದಗಿಸಲು ಗುರಿ ನಿಗದಿಯಾಗಿಲ್ಲ. ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರ ಕಚೇರಿಗೆ ಗುರಿ ನಿಗದಿ ಪಡಿಸಿಕೊಡುವಂತೆ ಪ್ರಸ್ತಾವನೆ ಸಲ್ಲಿಸಿ. ನಿವೇಶನ ಹಾಗೂ ಮನೆ ಇಲ್ಲದ ಫಲಾನುಭವಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಅಲೆಮಾರಿ ಅಥವಾ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಒಬ್ಬರು ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಒಬ್ಬರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಆಯ್ಕೆ ಮಾಡಬೇಕಿರುತ್ತದೆ. ಈ ಜನಾಂಗಕ್ಕೆ ಸೇರಿದ ಜಿಲ್ಲಾ ಪಂಚಾಯತ್ ಸದಸ್ಯರು ಇರುವುದಿಲ್ಲ. ಒಬ್ಬರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಆಯ್ಕೆ ಮಾಡಬೇಕಿರುತ್ತದೆ. ಸರ್ಕಾರ ವಿಧಿಸಿರುವ ಷರತ್ತುಗಳೊಂದಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಅರ್ಹ ಸದಸ್ಯರನ್ನು ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಅರೆ ಅಲೆಮಾರಿ ಹಾಗೂ ಅಲೆಮಾರಿ ಜನಾಂಗದವರಿಗೆ ಸರ್ಕಾರದ ಯೋಜನೆಗಳು ತಲುಪಿರುವ ಬಗ್ಗೆ ಪರಿಶೀಲಿಸುವುದು ಸಮಿತಿಯ ಮುಖ್ಯ ಉದ್ದೇಶವಾಗಿರುತ್ತದೆ. ಸರ್ಕಾರ ನಿಗದಿಪಡಿಸುವ ಅವಧಿಗೆ ಕಾಲ ಕಾಲಕ್ಕೆ ಸರಿಯಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಭೆ ಆಯೋಜಿಸುವಂತೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಗಕ್ಕೆ ಸೇರಿದ ಗೊಲ್ಲರು ಹಾಗೂ ದೊಂಬಿದಾಸ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಹಿಳೆಯರನ್ನು ಋತು ಚಕ್ರ ಅವಧಿಯಲ್ಲಿ ಊರಿನಿಂದ ಹೊರಗಿಡುವುದು ಹಾಗೂ ಮುಂತಾದ ಮೂಢನಂಬಿಕೆಗಳ ಆಚರಣೆಗಳಿದ್ದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ ಅವುಗಳನ್ನು ದೂರ ಮಾಡಬೇಕು. ಈ ಜನಾಂಗದಲ್ಲಿ ಇರುವ ವಿದ್ಯಾವಂತ ವ್ಯಕ್ತಿಗಳನ್ನು ಗುರುತಿಸಿ ಜಾಗೃತಿ ಕಾಯ೯ಕ್ರಮದಲ್ಲಿ ಅವರು ಪಾಲ್ಗೊಳ್ಳುವಂತೆ ಮಾಡಿ ಎಂದರು.
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ, ಸ್ನಾತಕೋತ್ತರ ವಿಭಾಗದಲ್ಲಿ ನೀಡುವ ವಿಧ್ಯಾರ್ಥಿ ವೇತನದ ಬಗ್ಗೆ ಡಿಸಿ ಪರಿಶೀಲಿಸಿದರು. ಸದರಿ ಸಾಲಿನಲ್ಲಿ 740 ವಿದ್ಯಾರ್ಥಿಗಳಿಗೆ 14 ಲಕ್ಷದ 80 ಸಾವಿರ ಮೆಟ್ರಿಕ್ ಪೂವ೯ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. ಮೆಟ್ರಿಕ್ ನಂತರ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ವೇತನ ಪಾವತಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಹಿಂದುಳಿದ ವಗ೯ಗಳ ಕಲ್ಯಾಣಧಿಕಾರಿ ಪಿ.ಬಿ. ಬಸವರಾಜು ಅವರು ಸಭೆಗೆ ಮಾಹಿತಿ ನೀಡಿದರು.