ರಾಮನಗರ : ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣವನ್ನು ವಿರೋಧಿಸಿ ನಾಳೆ ಬಿಜೆಪಿ ಹಾಗೂ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕನಕಪುರ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಪೊಲೀಸ್ ಇಲಾಖೆ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಂಡಿದೆ.
ಕಾಂಗ್ರೆಸ್ನ ಮಾಜಿ ಸಚಿವ ಡಿ .ಕೆ .ಶಿವಕುಮಾರ್ ಸ್ವಕ್ಷೇತ್ರ ಕನಕಪುರದ ಕಪಾಲ ಬೆಟ್ಟದಲ್ಲಿ ಸುಮಾರು 114 ಅಡಿ ಎತ್ತರದ ಯೇಸು ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದು, ಡಿ.25ರಂದು ಯೇಸು ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಇದಕ್ಕೆ ಬಿಜೆಪಿ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾಳೆ ಬಿಜೆಪಿ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕನಕಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಇದರಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಅನೇಕ ಬಿಜೆಪಿ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದ್ದು, ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಎ ಶೆಟ್ಟಿ ಮಾಹಿತಿ ನೀಡಿದ್ದಾರೆ.
ನಾಳೆ ನಡೆಯುವ ಪ್ರತಿಭಟನೆಗೆ ಬಗ್ಗೆ ಮಾಜಿ ಸಚಿವ ಡಿಕೆಶಿವಕುಮಾರ್ ಪ್ರತಿಕ್ರಯಿಸಿದ್ದು, ನಾಳೆ ನಡೆಯುವ ಪ್ರತಿಭಟನೆ ಸಾಕಷ್ಟು ಸೂಕ್ಷತೆಯಿಂದ ಕೂಡಿದೆ. ಸಣ್ಣ ಗಲಾಟೆ ನಡೆದರೂ ಅದು ಬೇರೆ ರೀತಿ ತಿರುವು ಪಡೆದುಕೊಳ್ಳಲಿದೆ. 400 ವರ್ಷಗಳ ಇತಿಹಾಸ ಇರೋ ಸ್ಥಳದಲ್ಲಿ ಆಶಾಂತಿ ಮೂಡಿಸಲು ಮುಂದಾಗಿದ್ದಾರೆ. ಕನಕಪುರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಹಾಗೂ ನನ್ನ ಸಹೋದರನ ವಿರುದ್ಧ ಸಂಚು ರೂಪಿಸಲು ಮುಂದಾಗಿದ್ದಾರೆ. ಆದ್ರೆ ತಾಲೂಕಿನ ಜನರು ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗಬಾರದು. ಶಾಂತಿಯಿಂದ ಇರುವಂತೆ ಮನವಿ ಮಾಡಿದ್ದಾರೆ.