ಶಿವಮೊಗ್ಗ: ರಂಜಾನ್ ಹಾಗೂ ಬಸವ ಜಯಂತಿ ಆಚರಣೆಗೆ ಯಾವುದೇ ಗೊಂದಲ ಬೇಡ. ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ದಾರಿತಪ್ಪಿಸುವ ಹೇಳಿಕೆಗಳಿಗೆ ಯಾರೂ ಕೂಡ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಂಜಾನ್ ಮತ್ತು ಬಸವ ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ತೊಂದರೆ ಆಗುವುದಿಲ್ಲ. ಲಾಕ್ಡೌನ್ ಜಾರಿಯಲ್ಲಿದ್ದರೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ದಿನಸಿ, ತರಕಾರಿ, ಹಣ್ಣು,ಮೀನು, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಸಾರ್ವಜನಿಕರು ನಿಗದಿಪಡಿಸಿದ ಸಮಯದಲ್ಲಿ ಖರೀದಿ ಮಾಡಬಹುದಾಗಿದೆ. ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಾಲ್ಕು ದಿನಗಳ ಕಾಲ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ.
ಬಿಜೆಪಿ ಸರ್ಕಾರ ಎಲ್ಲ ಜಾತಿ ಧರ್ಮದವರನ್ನು ಒಟ್ಟಿಗೆ ಕರೆದುಕೊಂಡು ಹೋಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕೆಲವರು ಹಬ್ಬದ ಸಂದರ್ಭದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ ಎಂದು ಕೋಮು ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ರಕ್ಷಣೆ, ರೈಲ್ವೆ, ಮೆಡಿಕಲ್, ಆಹಾರ ಸಂಸ್ಕರಣಾ ಘಟಕ ಇವುಗಳಿಗೆಲ್ಲಾ ವಿನಾಯಿತಿ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ಈ ನಾಲ್ಕು ಘಟಕಗಳು ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದರು.
ಓದಿ:ರಾಜ್ಯದಲ್ಲಿ ಮತ್ತೆ 39,998 ಕೊರೊನಾ ಸೋಂಕಿತರು ಪತ್ತೆ: 517 ಮಂದಿಯ ಉಸಿರು ನಿಲ್ಲಿಸಿದ ಹೆಮ್ಮಾರಿ
ಜಿಲ್ಲೆಗೆ 16,000 ಲಸಿಕೆ ಬಂದಿದೆ. ಅದರಲ್ಲಿ 3,000 ಲಸಿಕೆ ಖರ್ಚಾಗಿದೆ. ಉಳಿದಿರುವ ಲಸಿಕೆಯನ್ನು ಹಂಚಿಕೆ ಮಾಡಲಾಗುತ್ತಿದೆ. ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ. ಜಿಲ್ಲೆಯಲ್ಲಿ ಆಕ್ಸಿಜನ್ಗೆ ಕೊರತೆ ಉಂಟಾಗಬಾರದು ಎಂದು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲ ಎಂಬ ಮಾತು ಕೇಳಿಬರುತ್ತಿದೆ. ಆದರೆ ೧೦ ಮಂದಿ ಸೋಂಕಿತರು ಬರುವ ಕಡೆ ಒಮ್ಮೆಲೇ ನೂರು ಜನ ಬಂದರೆ ಏನು ಮಾಡಲು ಸಾಧ್ಯ, ಇರುವ ಸೌಲಭ್ಯಗಳನ್ನು ಬಳಸಿಕೊಂಡು ಸೋಂಕಿತರಿಗೆ ತೊಂದರೆಯಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.