ಶಿವಮೊಗ್ಗ : ಎಲ್ಲ ಮೋರ್ಚಾಗಳಿಗೆ ಪ್ರಾಮುಖ್ಯತೆ ಕೊಟ್ಟರೆ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
ನಗರದ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ಡಾ. ತಾನಾಜಿ ಅವರ ನಿವಾಸದಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಚಿಂತನ - ಮಂಥನ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯತೆಯ ಆಧಾರದಲ್ಲಿ ಪ್ರಧಾನಿಗಳು ದೇಶವನ್ನು ಕಟ್ಟುತ್ತಿದ್ದಾರೆ. ಹಾಗಾಗಿ ಸಂಘಟನೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು.
ನಂತರ ಮಾತನಾಡಿದ ಸಾಗರ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಪಕ್ಷ ಎಲ್ಲ ಸಮಾಜಕ್ಕೂ ಅವಕಾಶಗಳನ್ನು ನೀಡಿದೆ. ರಾಜ್ಯದಲ್ಲಿ ಈಡಿಗ ಸಮುದಾಯದ ಆರು ಜನ ಶಾಸಕರು ಬಿಜೆಪಿ ಪಕ್ಷದಲ್ಲಿದ್ದೇವೆ. ಆದರೆ, ಬೇರೆ ಯಾವ ಪಕ್ಷದಲ್ಲೂ ಇಂತಹ ಅವಕಾಶ ಮಾಡಿಕೊಟ್ಟಿಲ್ಲ ಎಂದರು.
ಕೇಂದ್ರ ಮಟ್ಟದಲ್ಲಿ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಲಾಗಿದೆ. ಆದರೆ, ಅನೇಕರಿಗೆ ಇದು ಗೊತ್ತಿಲ್ಲ ಎಂದರು. ಮುಖ್ಯಮಂತ್ರಿಗಳ ಸಣ್ಣ ಸಣ್ಣ ಯೋಜನೆಗಳು ಬಹುದೊಡ್ಡ ಪರಿಣಾಮ ಬೀರುತ್ತವೆ. ಹಾಗೆಯೇ ಯಡಿಯೂರಪ್ಪನವರ ಯೋಜನೆಗಳು ಸರ್ವವ್ಯಾಪಿ ಸರ್ವ ಸ್ಪರ್ಶಿ ಆಗಿವೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು ಉದ್ಘಾಟಿಸಿದರು.
ಈ ವೇಳೆ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಗದ್ಧಿ, ರಾಜ್ಯ ಉಪಾಧ್ಯಕ್ಷ ಅಶೋಕ ಮೂರ್ತಿ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ನಾಯ್ಡು ಹಾಗೂ ಸಿದ್ದೇಶ್, ಪ್ರಭಾರಿ ಅರುಣ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್, ಪ್ರದೀಪ್ ಹೊನ್ನಪ್ಪ ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.