ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು ಶೇ 60 ರಷ್ಟು ರಸ್ತೆಗಳು ಹಾನಿಗೀಡಾಗಿದ್ದು, ಸೇತುವೆ, ಮೋರಿಗಳು, ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಆಸ್ತಿ - ಪಾಸ್ತಿಗೆ ಅಪಾರ ನಷ್ಟ ಉಂಟಾಗಿದೆ. ಪ್ರಾಥಮಿಕವಾಗಿ ಸುಮಾರು 150 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತ ಸೋಮಲ್ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ನೆರೆ ಪರಿಸ್ಥಿತಿ ಸಂಪೂರ್ಣವಾಗಿ ಇಳಿದಿದ್ದು, ಪುನರ್ ವಸತಿ ಸೇರಿದಂತೆ ಪರಿಹಾರ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಳೆದ 4 ದಿನಗಳಲ್ಲಿ ನೆರೆ ಪೀಡಿತ ಪ್ರದೇಶಗಳಿಂದ 250 ಕುಟುಂಬಗಳ ಸುಮಾರು 1,675 ಜನರನ್ನು ರಕ್ಷಿಸಲಾಗಿದೆ. ಇವರಲ್ಲಿ 556 ಮಂದಿಯನ್ನು ಬೋಟ್ಗಳ ಸಹಾಯದಿಂದ ನೆರೆ ಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ. ನಗರದಲ್ಲಿ ತೆರೆಯಲಾಗಿರುವ 15 ಪರಿಹಾರ ಕೇಂದ್ರಗಳಲ್ಲಿ 2,500 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ಅವರಿಗೆ ಬಿಸಿಯೂಟ, ಬಟ್ಟೆ, ಚಪ್ಪಲ್, ಸ್ಯಾನಿಟರಿ ಪ್ಯಾಡ್ಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಒದಗಿಸಲಾಗುತ್ತಿದೆ. ಇನ್ನು 7-10 ದಿನಗಳ ಕಾಲ ನೆರೆ ಪರಿಹಾರ ಕೇಂದ್ರಗಳು ಮುಂದುವರೆಯುವ ಸಾಧ್ಯತೆ ಇದೆ. ಈ ಕೇಂದ್ರಗಳಲ್ಲಿ ಇನ್ನಷ್ಟು ಉತ್ತಮ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಮಕ್ಕಳಿಗೆ ಆಟವಾಡುವ ಸಾಮಗ್ರಿಗಳು, ಪೇಪರ್, ಟಿವಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಚಾರುಲತ ಮಾಹಿತಿ ನೀಡಿದರು.
ಪರಿಹಾರ ಕೇಂದ್ರಗಳಲ್ಲಿ ನೆಲೆಸಿರುವ ಸಂತ್ರಸ್ತರಲ್ಲಿ ಬಹುತೇಕ ಮಂದಿ ಎಲ್ಲವನ್ನೂ ಕಳೆದುಕೊಂಡಿದ್ದು, ಅವರಿಗೆ ಮಾನಸಿಕವಾಗಿ ಧೈರ್ಯ ತುಂಬಲು ಕೌನ್ಸೆಲಿಂಗ್ ಮಾಡಲಾಗುವುದು. ಇದಕ್ಕಾಗಿ ಎಲ್ಲಾ ಪರಿಹಾರ ಕೇಂದ್ರಗಳಲ್ಲಿ ತಜ್ಞರನ್ನು ನಿಯೋಜಿಸಲಾಗುವುದು. ಸಂತ್ರಸ್ತರ ನೆರವಿಗೆ ಸಾಧನ ಸಾಮಗ್ರಿಗಳನ್ನು ನೀಡುವಂತೆ ಮನವಿ ಮಾಡಲಾಗಿದ್ದು, ಮಹಾನಗರ ಪಾಲಿಕೆ ಕಚೇರಿಯಲ್ಲಿ ಸ್ವೀಕಾರ ಕೇಂದ್ರ ತೆರೆಯಲಾಗಿದೆ. ಈಗಾಗಲೇ ಹಲವು ಮಂದಿ ನೆರವು ಒದಗಿಸುತ್ತಿದ್ದು, ಇನ್ನಷ್ಟು ನೆರವಿನ ಅಗತ್ಯವಿದೆ ಎಂದು ಹೇಳಿದರು.
ವ್ಯವಸ್ಥಿತ ಪರಿಹಾರ ಕಾರ್ಯ:
ಪರಿಹಾರ ಹಾಗೂ ಪುನರ್ವಸತಿ ಕಾರ್ಯ ಅತ್ಯಂತ ಸವಾಲಿನಿಂದ ಕೂಡಿದ್ದು, ವ್ಯವಸ್ಥಿತವಾಗಿ ಪರಿಹಾರ ಕಾರ್ಯವನ್ನು ಕೈಗೊಳ್ಳಲು 10 ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಪರಿಹಾರ ಕೇಂದ್ರ, ಆರೋಗ್ಯ ಮತ್ತು ಸ್ವಚ್ಛತೆ, ನೀರು ಪೂರೈಕೆ ಮತ್ತು ಪರೀಕ್ಷೆ, ಪರಿಹಾರ ವರದಿಗಳು, ಕೌಶಲ್ಯ ತರಬೇತಿ, ನಾಶಗೊಂಡಿರುವ ದಾಖಲೆಗಳನ್ನು ಮತ್ತೆ ಸಿದ್ಧಪಡಿಸುವುದು, ಪುನರ್ವಸತಿ ಕಾರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಗುರುತಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.