ಶಿವಮೊಗ್ಗ: ಕೊರೊನಾ ಪ್ರಕರಣಗಳಲ್ಲಿ ಪ್ರೈಮರಿ ಹಾಗೂ ಸೆಕೆಂಡರಿ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವ ಜವಾಬ್ದಾರಿಯನ್ನು ಬೂತ್ಮಟ್ಟದ ಅಧಿಕಾರಿಗಳಿಗೆ ವಹಿಸಲಾಗಿದ್ದು, ಅವರು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದರೆ ಕೊರೊನಾ ಹರಡುವುದನ್ನು ತಡೆಗಟ್ಟಬಹುದು ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದರು.
ಅಂಬೇಡ್ಕರ್ ಭವನದಲ್ಲಿ ಕೊರೊನಾ ನಿಯಂತ್ರಣದಲ್ಲಿ ಬೂತ್ಮಟ್ಟದ ಅಧಿಕಾರಿಗಳ ಹೊಣೆಗಾರಿಕೆ ಕುರಿತು ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಥಮ ಮತ್ತು ದ್ವೀತಿಯ ಸಂಪರ್ಕ ಹೊಂದಿದವರ ಹೆಸರು, ಆಧಾರ್ ಸಂಖ್ಯೆ, ವಿಳಾಸ, ಮೊಬೈಲ್ ಸಂಖ್ಯೆ, ವಾಸದ ವಿವರಗಳನ್ನು ಪಡೆದು ನಿಗದಿತ ನಮೂನೆಯಲ್ಲಿ ಮೇಲ್ವಿಚಾರಕರಿಗೆ ಸಲ್ಲಿಸಬೇಕು. ಕೊರೊನಾ ಪಾಸಿಟಿವ್ ವ್ಯಕ್ತಿಗಳ ಹೆಸರು, ವಿಳಾಸವನ್ನು ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಬಾರದು ಎಂದರು.
ಕೊರೊನಾ ಪಾಸಿಟಿವ್ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವ ಕಾರ್ಯದಲ್ಲಿ ಸಾರ್ವಜನಿಕರು ಸಹ ಇವರೊಂದಿಗೆ ಸಹಕರಿಸಿ ಮಾಹಿತಿ ಒದಗಿಸಲು ನೆರವು ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಶಿವಮೊಗ್ಗ ತಹಶೀಲ್ದಾರ್ ಎನ್.ಜೆ.ನಾಗರಾಜ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ರೀಧರ್, ಕಾರ್ಯನಿರ್ವಾಹಕ ಅಧಿಕಾರಿ ಡಾ. ಕಲ್ಲಪ್ಪ, ಶ್ರೀನಿವಾಸ್, ರಿಯಾಜ್ ಹಾಗೂ ಗೋಪಿನಾಥ್ ಉಪಸ್ಥಿತರಿದ್ದರು.