ಶಿವಮೊಗ್ಗ: ರಾಜ್ಯದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘ ಹೆಚ್ಚು ಕ್ರಿಯಾಶೀಲವಾಗಿದೆ. ಆರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಜಿಲ್ಲೆಯಲ್ಲಿ ನಡೆದಿವೆ ಎಂದು ಜಿಲ್ಲಾ ಸರ್ಕಾರಿ ನೌಕರರು ಸಂಘದ ಹಂಗಾಮಿ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
ಬುಧವಾರ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಸರ್ಕಾರಿ ನೌಕರರ ಸಂಘ ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಸುಮಾರು 2.25 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ನೌಕರರ ಭವನದ ಕಟ್ಟಡ ಕಟ್ಟಲಾಗಿದೆ. 25 ಲಕ್ಷ ರೂ ವೆಚ್ಚದಲ್ಲಿ ನೂತನ ಸಭಾಂಗಣ ನಿರ್ಮಿಸಲಾಗಿದೆ. ಕೆಇಬಿ ವೃತ್ತದಲ್ಲಿರುವ ಸಂಘದ ಜಾಗದಲ್ಲಿ ವಾಣಿಜ್ಯ ಮಳಿಗೆಯ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಂಘದ ಮೂರನೇ ಮಹಡಿಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ 14 ವಸತಿ ಕೊಠಡಿಗಳನ್ನು ನಿರ್ಮಿಸಲಾಗಿದ್ದು. ರಾಜ್ಯದಲ್ಲಿಯೇ ಮಾದರಿಯಾದ ನೌಕರರ ಸೇವಾ ಕೇಂದ್ರ ಆಡಳಿತ ಕಚೇರಿಯನ್ನು ಸ್ಥಾಪಿಸಲಾಗಿದೆ. ವಿವಿಐಪಿ ಅತಿಥಿ ಗೃಹಗಳು ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದರು.