ಶಿವಮೊಗ್ಗ: ಸೊರಬ ತಾಲೂಕಿನ ಮೂಗೂರು ಏತ ನೀರಾವರಿಗೆ 105 ಕೋಟಿ ರೂ., ಮೂಡಿ ಏತ ನೀರಾವರಿಗೆ 275 ಕೋಟಿ ರೂ. ಅನುದಾನ ಮಂಜೂರು ಮಾಡಿ, 15 ದಿನಗಳ ಒಳಗಾಗಿ ಶಂಕುಸ್ಥಾಪನೆ ಮಾಡಲಾಗುತ್ತದೆ ಸಿಎಂ ಬಿ.ಎಸ್.ಯಡಿಯೂರಪ್ಪ ಎಂದರು.
ಸೊರಬದಲ್ಲಿ ಮಾತನಾಡಿದ ಅವರು, ಆಗಸ್ಟ್ 15ರ ಸಂಜೆ ದೆಹಲಿಗೆ ತೆರಳಿ ಪ್ರವಾಹ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡಲು ಕೇಂದ್ರ ಸರ್ಕಾರವನ್ನು ಕೋರಲಾಗುವುದು. ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಈಗಾಗಲೇ ರಾಜ್ಯದ ನೆರೆ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಒಂದು ವಾರದ ಒಳಗಾಗಿ ಪ್ರವಾಹದಿಂದ ಉಂಟಾಗಿರುವ ಹಾನಿ ಬಗ್ಗೆ ವಾಸ್ತವಿಕ ಚಿತ್ರಣ ದೊರೆಯಲಿದೆ ಎಂದರು.
ಪ್ರಧಾನಮಂತ್ರಿ ಕೃಷಿ ಸನ್ಮಾನ್ ಯೋಜನೆಯಡಿ ಅರ್ಹ ರೈತರ ಖಾತೆಗಳಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ. ಜಮಾ ಮಾಡಲಾಗುವುದು. ಇದರಲ್ಲಿ ಮೊದಲನೇ ಕಂತಿನ 2ಸಾವಿರ ರೂ. ವಾರದ ಒಳಗಾಗಿ ಹಾಕಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಮನೆ ಕಳೆದುಕೊಂಡವರಿಗೆ ಪರಿಹಾರದ ಚೆಕ್ ವಿತರಿಸಿದರು. ಈ ವೇಳೆ ಶಾಸಕ ಕುಮಾರ ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಹಾವೇರಿ ಸಂಸದ ಶಿವಕುಮಾರ ಉದಾಸಿ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿ ಸೇರಿ ಇತರರು ಹಾಜರಿದ್ದರು.