ಶಿವಮೊಗ್ಗ: ಆಪರೇಷನ್ ಕಮಲದ ಮೂಲಕ ಬಿಜೆಪಿಯು ರಾಜ್ಯದ ಮೈತ್ರಿ ಸರ್ಕಾರವನ್ನು ಬೀಳಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜಾತ್ಯಾತೀತ ಜನತಾ ದಳ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿತು.
ಸುಗಮವಾಗಿ ನಡೆಯುತ್ತಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಬಿಜೆಪಿ ರಾಜಕೀಯ ಲಾಬಿ ನಡೆಸುತ್ತಿದೆ. ಪ್ರಜಾಪ್ರಭುತ್ವದಲ್ಲಿ ವಿಧನಾಸಭೆಯಲ್ಲಿ ಹೆಚ್ಚು ಬಹುಮತ ಹೊಂದಿರುವ ಪಕ್ಷ ಆಡಳಿತ ನಡೆಸುತ್ತದೆ. ಅದರಂತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸರ್ಕಾರ ರಚಿಸಿಕೊಂಡು ಉತ್ತಮ ಸರ್ಕಾರ ನಡೆಸಿಕೊಂಡು ಹೋಗುತ್ತಿವೆ. ಇದನ್ನು ಸಹಿಸದ ಬಿಜೆಪಿಯ ಕೇಂದ್ರ ಹಾಗೂ ರಾಜ್ಯದ ನಾಯಕರು ಸರ್ಕಾರವನ್ನು ಬೀಳಿಸುವ ಯತ್ನ ನಡೆಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳಿಗೆ ಹಣದ ಆಮಿಷ ತೋರಿ, ಶಾಸಕರುಗಳು ರಾಜೀನಾಮೆ ನೀಡುವಂತೆ ಮಾಡಿ ಸರ್ಕಾರವನ್ನು ಬೀಳಿಸುವ ಯತ್ನ ಮಾಡಲಾಗುತ್ತಿದೆ. ಅಮಿತ್ ಶಾ ಅವರು ರಾಷ್ಟ್ರದಲ್ಲಿ ವಿರೋಧ ಪಕ್ಷಗಳೇ ಇಲ್ಲದಂತೆ ಮಾಡಲು ಈ ರೀತಿ ಆಪರೇಷನ್ ಕಮಲ ನಡೆಸುತ್ತಿದ್ದಾರೆ ಎಂದು ಜೆ.ಡಿ.ಮಂಜುನಾಥ್ ಪ್ರತಿಭಟನಾ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದರು .
ಕೇಂದ್ರ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕುದುರೆ ವ್ಯಾಪಾರ ನಡೆಸುತ್ತಿದೆ. ಬಿಜೆಪಿ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನಾ ಧರಣಿ ನಡೆಸಲಾಯಿತು.