ಶಿವಮೊಗ್ಗ: ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು ಎಂದು ನವಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ ರಮೇಶ್ ಗೌಡ ಆಗ್ರಹಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳು ಈಗಾಗಲೇ ಪೋಷಕರಿಗೆ ಶುಲ್ಕ ಕಟ್ಟುವಂತೆ ಒತ್ತಾಯಿಸುತ್ತಿವೆ. ಅದರಲ್ಲೂ ಕೆಲವು ಶಾಲೆಗಳು ಪೂರ್ತಿ ಶುಲ್ಕ ಕಟ್ಟುವಂತೆ ಒತ್ತಡ ಹೇರುತ್ತಿವೆ. ಇನ್ನು ಆನ್ಲೈನ್ ತರಗತಿಯ ನೆಪ ಹೇಳಿ ಪೂರ್ತಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಶುಲ್ಕ ಕಟ್ಟದಿದ್ದರೆ ಪಠ್ಯಪುಸ್ತಕ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಕೊರೊನಾ ಹಿನ್ನೆಲೆ ಶಾಲೆಗಳು ಆರಂಭವಾಗಿಲ್ಲ ಮತ್ತು ಪೋಷಕರು ಕೂಡ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪೂರ್ತಿ ಶುಲ್ಕ ಕಟ್ಟುವಂತೆ ಹೇಳುತ್ತಿರುವ ಖಾಸಗಿ ಶಾಲೆಗಳ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ ಶುಲ್ಕ ಪಾವತಿ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.