ಶಿವಮೊಗ್ಗ: ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಕೆಪಿಸಿಸಿ ನೂತನ ಕಟ್ಟಡದ ಸಭಾಂಗಣದಲ್ಲಿ ಜು.2 ರಂದು ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಕಾಲದಲ್ಲಿ ಈ ಸಮಾರಂಭಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲು ಸಾಧ್ಯವಾಗದ ಕಾರಣ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು ರಾಜ್ಯಾದ್ಯಂತ ನೇರ ಪ್ರಸಾರದ ಮೂಲಕ ಮಾದರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಎಲ್ಲಾ ವಾರ್ಡ್ಗಳಲ್ಲಿ ಏಕ ಕಾಲದಲ್ಲಿ ಈ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ. 350 ಸ್ಥಳಗಳಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದು, 2 ಟಿವಿಗಳನ್ನಿಟ್ಟು 1 ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮ ಹಾಗೂ ಆ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮ ನೇರಪ್ರಸಾರ ಮಾಡಲಾಗುವುದು ಎಂದರು.
ಅಧಿಕಾರ ಸ್ವೀಕಾರ ಸಮಾರಂಭ ವಿಳಂಬವಾಗಿದ್ದರೂ ಸಹ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬುವ ಪದಗ್ರಹಣ ಸಮಾರಂಭ ಅಭೂತಪೂರ್ವ ರೀತಿಯಲ್ಲಿ ನಡೆಸಲು ಸಿದ್ದತೆ ಮಾಡಿಕೊಂಡಿದ್ದು, ನೂತನ ಸಾರಥಿ ವೈಭವೀಕರಣವಲ್ಲ, ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಹುಮ್ಮಸ್ಸು ತುಂಬಲು ಮತ್ತು ಪಕ್ಷವನ್ನು ಸಂಘಟಿಸುವುದಾಗಿದೆ ಎಂದರು. ನೂತನ ಅಧ್ಯಕ್ಷರೊಂದಿಗೆ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಹಾಗೂ ಸತೀಶ್ ಜಾರಕಿಹೊಳಿ ಅಧಿಕಾರ ಸ್ವೀಕರಿಸಲಿದ್ದಾರೆ. ಏಕಕಾಲದಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಲಿದ್ದಾರೆ ಎಂದರು.
ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಹೆಚ್.ಎಂ. ಚಂದ್ರಶೇಖರಪ್ಪ, ಗೋಪಾಲಕೃಷ್ಣ ಬೇಳೂರು, ಕೆ.ಬಿ. ಪ್ರಸನ್ನಕುಮಾರ್, ಪಕ್ಷದ ಮುಖಂಡರಾದ ಕಲಗೋಡು ರತ್ನಾಕರ್, ಡಾ. ಶ್ರೀನಿವಾಸ್, ಸಿ.ಎಸ್. ಚಂದ್ರಭೂಪಾಲ, ತಲ್ಲೂರ್ ರಾಜು ಇನ್ನಿತರರು ಉಪಸ್ಥಿತರಿದ್ದರು.