ಶಿವಮೊಗ್ಗ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಾಳಿ ಅವರು ಸರ್ಕಾರಿ ನೌಕರರಾಗಿ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಅವರನ್ನು ಆಯ್ಕೆ ಮಾಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಸರ್ಕಾರಿ ನೌಕರರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಹೊಂದಿದ್ದು, ಮುಖ್ಯಮಂತ್ರಿಗಳು ಅಭಿನಂದನಾ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಿದ್ದಾರೆ.
ಇದನ್ನೂ ಓದಿ: ರಾಜಣ್ಣ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ: ಡಿ.ಕೆ. ಶಿವಕುಮಾರ್
ಶಿವಮೊಗ್ಗ ಜಿಲ್ಲೆಯ ನಗರ ಯೋಜನಾ ಕೋಶದಲ್ಲಿ ಜಿಲ್ಲಾ ಯೋಜನಾಧಿಕಾರಿಯಾಗಿ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ನಗರಸಭೆಗಳಲ್ಲಿ ಅನೇಕ ಜನಪರ ಕಾರ್ಯಕ್ರಗಳನ್ನು ಯಶಸ್ವಿಯಾಗಿ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶಿಸ್ತು, ಸಭ್ಯತೆ, ಪಾರದರ್ಶಕ ಆಡಳಿತದಿಂದ ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಲ್ಲಿ ಮೆಚ್ಚುಗೆ ಗಳಿಸಿರುವ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಸಂಘ ಸಂಸ್ಥೆಗಳು ಸರ್ವೋತ್ತಮ ಪ್ರಶಸ್ತಿಗೆ ಭಾಜನರಾದ ನಾಗೇಂದ್ರ ಎಫ್. ಹೊನ್ನಾಳಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.