ಶಿವಮೊಗ್ಗ: ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಾಸಕರ ಜೊತೆ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ನಡೆಸಿದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರ ಸಂಬಂಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ಕೋವಿಡ್ ಪೀಡಿತರ ಅಗತ್ಯಗಳನ್ನು ನೋಡಿಕೊಳ್ಳಲು ಬೇಕಾದ ಸಿಬ್ಬಂದಿಯನ್ನು ಸ್ಥಳೀಯವಾಗಿ ನೇಮಕ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲಾ ಕೋವಿಡ್ ನಿರ್ವಹಣಾ ತಜ್ಞ ಸಮಿತಿಯ ಸದಸ್ಯ ಡಾ. ಶ್ರೀಕಾಂತ್ ಹೆಗಡೆ ಮಾತನಾಡಿ, ಮೂರನೇ ಅಲೆಯನ್ನು ತಡೆಯಲು ಲಸಿಕೆ ನೀಡುವುದನ್ನು ತೀವ್ರಗೊಳಿಸುವುದು ಮಾತ್ರ ಏಕೈಕ ಮಾರ್ಗವಾಗಿದೆ. ಮೂರನೇ ಅಲೆ ತಾಲೂಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದ್ದು, ಅಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಉತ್ತಮಪಡಿಸಬೇಕು. ಅಗತ್ಯ ಪ್ರಮಾಣದ ವೈದ್ಯರು, ನರ್ಸ್, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡುವ ಕಾರ್ಯವನ್ನು ತೀವ್ರಗೊಳಿಸಬೇಕು ಎಂದು ಹೇಳಿದರು.
ಇನ್ನೋರ್ವ ಸದಸ್ಯ ಧನಂಜಯ ಸರ್ಜಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಆದಷ್ಟು ಬೇಗನೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಬಿಗಿಗೊಳಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಸಮನ್ವಯತೆಯ ಅಗತ್ಯವಿದೆ. ಕೇವಲ ಆರ್ಟಿ-ಪಿಸಿಆರ್ ಪಾಸಿಟಿವ್ ವ್ಯಕ್ತಿಗಳನ್ನು ಮಾತ್ರವಲ್ಲದೆ, ಎದೆ ಸ್ಕ್ಯಾನಿಂಗ್ನಲ್ಲಿ ರೋಗ ಲಕ್ಷಣ ಕಂಡು ಬಂದವರನ್ನು ಸಹ ಕೋವಿಡ್ ಪಾಸಿಟಿವ್ ಲೆಕ್ಕಕ್ಕೆ ತೆಗೆದುಕೊಳ್ಳಬೇಕು. ಮೃತರ ಆಡಿಟ್ ಸಮರ್ಪಕವಾಗಿ ನಿರ್ವಹಿಸಬೇಕು. ಈಗ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆಗೂ ಜಿಲ್ಲಾ ಆರೋಗ್ಯ ಇಲಾಖೆ ನೀಡುತ್ತಿರುವ ಮಾಹಿತಿಗೂ ವ್ಯತ್ಯಾಸ ಕಂಡು ಬರುತ್ತಿದೆ. ಕೋವಿಡ್ನಿಂದ ಮೃತಪಟ್ಟವರ ಕುರಿತು ಸುಳ್ಳು ಲೆಕ್ಕ ತೋರಿಸಲಾಗುತ್ತಿದೆ ಹಾಗೂ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದೆ ಎಂದು ಆರೋಪಿಸಿದರು.
ಮೆಗ್ಗಾನ್ನಲ್ಲಿ ಮೃತರನ್ನು ಕೊಂಡೊಯ್ಯಲು ಆಂಬ್ಯುಲೆನ್ಸ್ಗಳಿಗೆ ಈಗಾಗಲೇ ದರ ನಿಗದಿಪಡಿಸಲಾಗಿದೆ. ಇದರ ಪಟ್ಟಿಯನ್ನು ಮೆಗ್ಗಾನ್ನಲ್ಲಿ ಪ್ರಕಟಿಸಲಾಗುವುದು. ಇದಕ್ಕಿಂತ ಹೆಚ್ಚಿನ ದರವನ್ನು ಪಡೆಯುವಂತಿಲ್ಲ. ರೆಮ್ಡಿಸಿವಿರ್ ದುರ್ಬಳಕೆ ಕುರಿತಾಗಿ ಜಿಲ್ಲೆಯಲ್ಲಿ ಮೂರು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.