ಶಿವಮೊಗ್ಗ: ಗ್ರಾಮೀಣ ಜನರು ತಮ್ಮ ದೈಹಿಕ ಮತ್ತು ಮಾನಸಿಕ ನೆಮ್ಮದಿ ಕಂಡುಕೊಳ್ಳಲು ಅನುಕೂಲವಾಗುವಂತೆ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಬಳಸುವುದರ ಜೊತೆಗೆ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಹೇಳಿದ್ದಾರೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಏರ್ಪಡಿಸಲಾಗಿದ್ದ ಶೌಚಾಲಯ ಬಳಕೆ ಮತ್ತು ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರ ದೇಶದಲ್ಲಿ ಬಯಲು ಶೌಚ ಮುಕ್ತಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದೆ. ಆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳ ಪಾತ್ರ ಪ್ರಮುಖವಾದುದಾಗಿದೆ ಎಂದರು.
ಪ್ರಸ್ತುತ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯ ರಹಿತರು ಶೌಚಾಲಯ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಯೋಜನೆಯ ಸದಾವಕಾಶವನ್ನು ಬಳಸಿಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರಾದ ಸಂತೋಷ್ ಕುಮಾರ್, ಗಣೇಶ್ ನಾಯ್ಕ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜು ಸೇರಿದಂತೆ ನೆರೆಯ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.