ಬೆಂಗಳೂರು: ಶಿಕ್ಷಕರ ದಿನಾಚರಣೆ ಹಿನ್ನೆಲೆ ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವೀಟ್ ಮೂಲಕ ಸರ್ಕಾರಕ್ಕೆ ಶಿಕ್ಷಕರ ಸಮಸ್ಯೆ ಹಾಗೂ ಸರ್ಕಾರ ಕೈಗೊಳ್ಳಬಹುದಾದ ಕ್ರಮಗಳನ್ನು ವಿವರಿಸಿದ್ದು, ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಶಿಕ್ಷಕರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದ್ದಾರೆ.
ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಖಾಸಗಿ ಶಾಲೆಗಳ 40,000ಕ್ಕೂ ಅಧಿಕ ಶಿಕ್ಷಕರು ಕೆಲಸ ಕಳೆದುಕೊಂಡಿದ್ದಾರೆ. 2,00,000ಕ್ಕೂ ಅಧಿಕ ಶಿಕ್ಷಕರಿಗೆ ಸಂಬಳವಿಲ್ಲದೆ ಒದ್ದಾಡುತ್ತಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವವರು ತಳ್ಳುಗಾಡಿ ವ್ಯಾಪಾರ, ಗಾರೆ ಕೆಲಸ ಮಾಡುತ್ತಿರುವಾಗ ಶಿಕ್ಷಣ ಕ್ಷೇತ್ರವನ್ನು ಸರಿ ದಾರಿಗೆ ತರಲು ಸರ್ಕಾರದ ಪ್ಲಾನ್ ಏನು ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ 80 ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ. 62.5ರಷ್ಟು ಮಕ್ಕಳಿಗೆ ಮಾತ್ರ ಸ್ಮಾರ್ಟ್ ಫೋನ್, ಲ್ಯಾಪ್ಟಾಪ್ ಲಭ್ಯತೆ ಇದೆ. ಶೇ. 53.75 ಮಕ್ಕಳಿಗೆ ಮಾತ್ರ ಇಂಟರ್ನೆಟ್ ಸಂಪರ್ಕ ಲಭ್ಯವಿದೆ. ಈ ಎಲ್ಲಾ ತಂತ್ರಜ್ಞಾನದ ಲಭ್ಯತೆ ಇಲ್ಲದ ಮಕ್ಕಳು ಆನ್ಲೈನ್ ಶಿಕ್ಷಣ ಪಡೆಯುವುದಾದರು ಹೇಗೆ ಎಂದು ಕೇಳಿದ್ದಾರೆ.
ಸರ್ಕಾರ ಈ ಕೂಡಲೇ ನಿದ್ದೆಯಿಂದೆದ್ದು ಹಳಿ ತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ಹಾಗೂ ಶಿಕ್ಷಕರಿಗೆ ನೆರವಾಗಲು ಕಾಂಗ್ರೆಸ್ನ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದ್ದೇನೆ ಎಂದು ಹತ್ತು ಅಂಶಗಳ ಪಟ್ಟಿಯನ್ನು ಕೂಡ ಡಿಕೆಶಿ ಬಿಡುಗಡೆ ಮಾಡಿದ್ದಾರೆ.