ತುಮಕೂರು: ಕೊರೊನಾ ಎಂಬ ಮಹಾ ಪಿಡುಗನ್ನು ನಿವಾರಣೆ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ಇದನ್ನು ತಡೆಗಟ್ಟಲು ವ್ಯವಸ್ಥಿತವಾದ ಯೋಜನೆಯನ್ನು ಹಾಕಿಕೊಳ್ಳಬೇಕಿತ್ತು. ಆದರೆ ಬಿಜೆಪಿ ನಿರ್ಲಕ್ಷ್ಯ ಭಾವನೆ ತಾಳಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆರೋಪಿಸಿದರು.
ತುಮಕೂರಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 30ನೇ ಪುಣ್ಯಸ್ಮರಣೆ ಅಂಗವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಕುಸಿದು ಬಿದ್ದು ಹೋಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಸೂಚನೆ ನೀಡಲಾಗಿದ್ದು, ಇಂತಹ ಸಂದರ್ಭದಲ್ಲಿ ತಮ್ಮ ಕೈಲಾದಷ್ಟು ಸಹಾಯವನ್ನು ಸಾರ್ವಜನಿಕರಿಗೆ ಮಾಡಬೇಕಿದೆ ಎಂದು ತಿಳಿಸಿದರು.
ರಾಜೀವ್ ಗಾಂಧಿ ದೇಶದ ಒಬ್ಬ ಅಭಿವೃದ್ಧಿಯ ಕನಸುಗಾರರಾಗಿದ್ದರು. ಅವರ ಆದರ್ಶಗಳು ಮತ್ತು ಕನಸುಗಳು ಇಂದು ನಮ್ಮೆದುರಿಗೆ ಇವೆ. ಅದನ್ನು ಸಾಕಾರಗೊಳಿಸುವ ಕೆಲಸ ಆಗಬೇಕಿದೆ ಎಂದರು.