ತುಮಕೂರು: ರಾಜ್ಯದ ಜನತೆ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಿರುವ ಹಣವನ್ನು ರಾಜ್ಯದ ಅಭಿವೃದ್ಧಿಗೆ ನೀಡುವಂತೆ ರಾಜ್ಯದ 28 ಸಂಸದರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಆಗ್ರಹಿಸಿ ಸಿಪಿಐ (ಎಂ) ವತಿಯಿಂದ ಪ್ರತಿಭಟಿಸಲಾಯಿತು.
ರಾಜ್ಯದಲ್ಲಿ ಕಳೆದೆರಡು ವರ್ಷಗಳಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ರಾಜ್ಯದ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಜನತೆಯ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯಕ್ಕೆ ಬರಬೇಕಿರುವ ಜಿಎಸ್ಟಿ ಬಾಕಿ, ಬಜೆಟ್ ಅನುದಾನದ ಬಾಕಿ ಹಾಗೂ ಕೋವಿಡ್-19 ಪರಿಹಾರದ ಮೊತ್ತವನ್ನು ಈ ಕೂಡಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಸುಬ್ರಹ್ಮಣ್ಯ, ಕೇಂದ್ರದ ವಿತ್ತ ಸಚಿವರು ಸಭೆ ನಡೆಸಿ ರಾಜ್ಯಗಳಿಗೆ ನೀಡಬೇಕಿರುವ ಜಿಎಸ್ಟಿ ಪಾಲನ್ನು ನೀಡಲು ಸಾಧ್ಯವಿಲ್ಲ. ನಿಮ್ಮ ರಾಜ್ಯಗಳ ಅಭಿವೃದ್ಧಿಗೆ ಸಾಲ ಪಡೆದುಕೊಳ್ಳಿ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಸಿಪಿಎಂ ಪಕ್ಷ ಖಂಡಿಸುತ್ತದೆ. ಕೇಂದ್ರವನ್ನು ಪ್ರತಿನಿಧಿಸುತ್ತಿರುವ ನಮ್ಮ ರಾಜ್ಯದ 28 ಸಂಸದರು ರಾಜ್ಯದ ಜಿಎಸ್ಟಿ ಪಾಲನ್ನು ತರಲು ವಿಫಲರಾಗಿದ್ದಾರೆ.
ಈಗಲಾದರೂ ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿ, ಜಿಎಸ್ಟಿ ಪಾಲನ್ನು ರಾಜ್ಯಕ್ಕೆ ತರುವ ಕಾರ್ಯ ಮಾಡಬೇಕಿದೆ. ರಾಜ್ಯ ಸರ್ಕಾರಗಳನ್ನು ಕೇಂದ್ರ ಸರ್ಕಾರ ಭಿಕ್ಷುಕ ಸರ್ಕಾರಗಳನ್ನಾಗಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.