ತುಮಕೂರು: ಜಿಲ್ಲಾ ಆರೋಗ್ಯ ಇಲಾಖೆಯಿಂದ 35 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ರಕ್ತ ಪರೀಕ್ಷೆ ಮಾಡುವ ಮೂಲಕ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಡಯಾಬಿಟಿಸ್ನಿಂದ ಆಗುವ ತೊಂದರೆಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಪಂಚಾಯತ್, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಅರಿವು ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಮಧುಮೇಹ ಬರಿ ಸಕ್ಕರೆ ಕಾಯಿಲೆ ಅಲ್ಲದೆ ಅದು ಕಣ್ಣು, ಮೂತ್ರಪಿಂಡ, ಹೃದಯ ಹಾಗೂ ದೇಹದಲ್ಲಿನ ನರಗಳಿಗೆ ತೊಂದರೆ ಉಂಟು ಮಾಡುತ್ತದೆ. ಮಧುಮೇಹದಿಂದ ಉಂಟಾಗುವ ಕುರುಡುತನವನ್ನು, ಸಕ್ಕರೆ ಕಾಯಿಲೆ ನಿಯಂತ್ರಣ ಹಾಗೂ ನಿಯತಕಾಲಿಕ ಕಣ್ಣಿನ ಪರೀಕ್ಷೆಯಿಂದ ತಡೆಗಟ್ಟುವುದು ಎಂಬ ವಿಷಯಗಳ ಬಗ್ಗೆ ಅರಿವಿನ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಮಾತನಾಡಿ, ಸಾರ್ವಜನಿಕರಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಆರೋಗ್ಯ ಇಲಾಖೆಯಿಂದ 35 ವರ್ಷ ಮೇಲ್ಪಟ್ಟ ಎಲ್ಲರಿಗೂ ರಕ್ತಪರೀಕ್ಷೆ ಮಾಡುವ ಮೂಲಕ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಡಯಾಬಿಟಿಸ್ ನಿಂದ ಕಣ್ಣಿನ ಕಾಯಿಲೆ, ಕಿಡ್ನಿ ತೊಂದರೆ, ಹೃದಯಕ್ಕೆ ತೊಂದರೆ ಯಾವುದೇ ಇದ್ದರೂ ಅದನ್ನು ಅರಿತು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.
ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ಮಹೇಶ್ ಮಾತನಾಡಿ, ಮಧುಮೇಹ ಹಾಗೂ ಮಧುಮೇಹದಿಂದ ಆಗುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧುಮೇಹದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.