ತುಮಕೂರು: ಗುಬ್ಬಿ ಪಟ್ಟಣದಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ವರ್ತಕರು ಸ್ವಯಂಪ್ರೇರಿತರಾಗಿ ವ್ಯಾಪಾರ ವಹಿವಾಟನ್ನು ಕೆಲವು ಗಂಟೆಗಳಿಗೆ ಮಾತ್ರ ಸೀಮಿತಗೊಳಿಸಲು ಮುಂದಾಗಿದ್ದಾರೆ.
ಈಗಾಗಲೇ ಗುಬ್ಬಿ ತಾಲೂಕಿನಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಸ್ವಯಂ ಲಾಕ್ಡೌನ್ ಮಾಡಲು ನಿರ್ಧರಿಸಿದ್ದಾರೆ. ಜೂನ್ 23ರಿಂದ ಜುಲೈ 6ರವರೆಗೆ ಪಟ್ಟಣದಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ನಿರ್ಧರಿಸಿದ್ದಾರೆ. ವರ್ತಕರ ಸಂಘ, ಕಿರಾಣಿ ವರ್ತಕರ ಸಂಘ, ಫ್ಯಾನ್ಸಿ ಸ್ಟೋರ್ ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯರು ಇದಕ್ಕೆ ಕೈ ಜೋಡಿಸಿದ್ದಾರೆ.
ಸಾರ್ವಜನಿಕರು ಈ ವ್ಯವಸ್ಥೆಗೆ ಸಹಕರಿಸಬೇಕೆಂದು ವರ್ತಕರು ಮನವಿ ಮಾಡಿದ್ದಾರೆ. ಅಲ್ಲದೆ ತಮ್ಮ ನಿರ್ಧಾರದ ಬಗ್ಗೆ ತಹಶೀಲ್ದಾರ್ ಅವರಿಗೂ ಮನವಿ ಪತ್ರವನ್ನು ವರ್ತಕರು ಸಲ್ಲಿಸಿದ್ದಾರೆ. ಗುಬ್ಬಿ ತಾಲೂಕನ್ನು ಕೊರೊನಾ ಮುಕ್ತಗೊಳಿಸಲು ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.