ತುಮಕೂರು: ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ ಮೊದಲ ಹಂತದಲ್ಲಿ ಜಿಲ್ಲೆಯ ಶಿರಾ ಹಾಗೂ ಕುಣಿಗಲ್ ತಾಲೂಕಿಗೆ ನೀರನ್ನು ಹರಿಸಲಾಗುತ್ತಿದ್ದು, ಜಿಲ್ಲೆಯ ನಾಲಾ ವ್ಯಾಪ್ತಿಯ ತಾಲೂಕುಗಳಿಗೆ ತಲಾ 10 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹೇಮಾವತಿ ಜಲಾಶಯದಿಂದ ಹರಿಸಲಾಗುವ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಕುರಿತು ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೊರೂರಿನ ಹೇಮಾವತಿ ಡ್ಯಾಂನಲ್ಲಿ 33 ಟಿಎಂಸಿ ನೀರು ಸಂಗ್ರಹವಿದ್ದು, ಶಿರಾ ಹಾಗು ಕುಣಿಗಲ್ ತಾಲೂಕಿಗೆ ಈಗ ಮೊದಲ ಹಂತದಲ್ಲಿ ನೀರು ಹರಿಸಲಾಗುತ್ತಿದೆ. ತಾಲೂಕಿಗೆ ನೀರು ಪ್ರವೇಶವಾದ ದಿನದಿಂದ ಲೆಕ್ಕ ಹಾಕಿ 10 ದಿನಗಳ ಕಾಲ ನೀರು ಹರಿಸಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ವೇಳಾಪಟ್ಟಿ ತಯಾರಿಸುವಂತೆ ಹೇಮಾವತಿ ಸಿಇಗೆ ಸೂಚಿಸಿದರು.
ಅಲ್ಲದೇ ಡ್ಯಾಂನಲ್ಲಿ ಹೆಚ್ಚು ನೀರು ಸಂಗ್ರಹವಾದರೆ 2ನೇ ಬಾರಿ ನೀರು ಹರಿಸಲಾಗುವುದು ಎಂದರು. ನಾಲೆಯಿಂದ ನೀರು ಹರಿಸಲು ಆರಂಭವಾಗುವ ದಿನದಿಂದ ಮುಕ್ತಾಯದವರೆಗೂ ಕೂಡ ಕುಡಿಯುವ ನೀರಿನ ಕೆರೆಗಳಿಗೆ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಗ್ರಾಮಾಂತರ ಪ್ರದೇಶಗಳಿಗೆ ನೀರು ಹರಿಸಿದರೂ ಸಹ ಕೆರೆಗಳು ಸಮರ್ಪಕವಾಗಿ ಭರ್ತಿಯಾಗುತ್ತಿಲ್ಲ. ಮೋಟಾರ್ ಪಂಪ್ ಸೆಟ್ ಗಳು ದುರಸ್ತಿಯಲ್ಲಿವೆ ಎಂದು ಶಾಸಕ ಗೌರಿಶಂಕರ್ ತಿಳಿಸಿದರು. ಗ್ರಾಮಾಂತರದಲ್ಲಿ 15 ದಿನದೊಳಗೆ ಪಂಪ್ ಸೆಟ್ ಗಳನ್ನು ರಿಪೇರಿ ಮಾಡಿಸಿ, ನೀರು ಹರಿಯುವಂತೆ ಮಾಡಿ ಎಂದು ಇಂಜಿನಿಯರ್ಗಳಿಗೆ ಸಚಿವ ಮಾಧುಸ್ವಾಮಿ ಸೂಚನೆ ನೀಡಿದರು. ಈಗಾಗಲೇ ತುರುವೇಕೆರೆ, ತಿಪಟೂರು, ಗುಬ್ಬಿ ತಾಲೂಕಿನಲ್ಲಿ ಕೆರೆಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಳೆದ ಸಾಲಿನಲ್ಲಿ 21 ಟಿಎಂಸಿ ನೀರನ್ನು ತುಮಕೂರು ನಾಲೆಯಿಂದ ಜಿಲ್ಲೆಗೆ ಬಳಸಿಕೊಳ್ಳಲಾಗಿದೆ. ಗೊರೂರು ಡ್ಯಾಂನಲ್ಲಿ ನೀರು ಸಂಗ್ರಹವಾಗಿದ್ದು, ನೀರು ವ್ಯರ್ಥವಾಗದಂತೆ ಜಿಲ್ಲೆಯಲ್ಲಿ ಬಳಸಿಕೊಳ್ಳೋಣ. ಹೇಮಾವತಿಯ ಇಂಜಿನಿಯರ್ಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಮೊದಲ ಹಂತದಲ್ಲಿ ಜಿಲ್ಲೆಯ ಹೇಮಾವತಿ ನಾಲೆಯಿಂದ ತಾಲೂಕುವಾರು ಹಂಚಿಕೆಯಾಗಿರುವ ನೀರನ್ನು ಸಮರ್ಪಕವಾಗಿ ಹರಿಸಿ, ಎಲೆಕ್ಟ್ರಾನಿಕ್ ಗೇಜ್ ಗಳನ್ನು ಅಳವಡಿಸಿ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಿಂದ ನೀರು ಹರಿಯಲು ಪ್ರಾರಂಭವಾದ ನಂತರ ಕುಡಿಯುವ ನೀರಿನ ಕೆರೆಗಳಿಗೆ ನೀರು ಹರಿಸಲು ಯಾವುದೇ ಅಡ್ಡಿಯಿಲ್ಲ. ರಾತ್ರಿಯಿಡೀ ನೀರು ಹರಿಯುತ್ತಿರುತ್ತದೆ, ಅದಕ್ಕಾಗಿ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.