ತುಮಕೂರು: ಕಳೆದ ಎರಡು ದಿನಗಳಿಂದ ಭೂಮಿ ವಂಚಿತ ಕುಟುಂಬದ ಮಕ್ಕಳು ಮತ್ತು ಮಹಿಳೆಯರನ್ನು ಬೀದಿಯಲ್ಲಿ ಕೂರಿಸುವುದು ಸರ್ಕಾರಕ್ಕೆ ಶೋಭೆ ತರುವಂತಹದ್ದಲ್. ಜಿಲ್ಲಾ ಸಚಿವರಿಗೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳಿಗೆ ಮಹಿಳೆಯರ ಮೇಲೆ ಗೌರವವಿದ್ದರೆ, ತುರ್ತಾಗಿ ಸ್ಥಳದಲ್ಲಿಯೇ ನಿವೇಶನದ ಹಕ್ಕುಪತ್ರಗಳನ್ನು ನೀಡಬೇಕು ಎಂದು ಕರ್ನಾಟಕ ಭೂ ಹಕ್ಕುದಾರರ ಸಲಹಾ ವೇದಿಕೆಯ ಸಲಹೆಗಾರ ಕಸವನಹಳ್ಳಿ ರಮೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಕಸವನಹಳ್ಳಿ ರಮೇಶ್ ಮಾತನಾಡಿ, ಸರ್ಕಾರ ರೈತರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂಬ ಹೇಳಿಕೆಗಳನ್ನು ನೀಡುವ ಮೂಲಕ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಡುತ್ತವೆ. ಆದರೆ, ರೈತರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುತ್ತಿಲ್ಲ. ರೈತರು ಉಳುಮೆ ಮಾಡುವುದಕ್ಕಾಗಿ ಮತ್ತು ವಾಸಿಸಲು ಬೇಕಾಗುವ ಸ್ವಲ್ಪ ಭೂಮಿ ನೀಡಲು ಹಿಂದೇಟು ಹಾಕುತ್ತಿದೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳು ಕಳೆದ ಎರಡು ದಿನಗಳಿಂದ ರಸ್ತೆಬದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಶೋಚನೀಯ ಸಂಗತಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ನೀಡುತ್ತೇವೆ. ಅವರ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಹೇಗೆ ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ನಮ್ಮ ಸಮಸ್ಯೆ ಬಗೆಹರಿಸಬೇಕು. ಕೇವಲ ಹೇಳಿಕೆಗಳ ಮೂಲಕ ನಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ.
ಹಾಗಾಗಿ ಸರ್ಕಾರದ ಕಾರ್ಯದರ್ಶಿ ಇಲ್ಲಿಗೆ ಬಂದು ಹಕ್ಕುಪತ್ರಗಳನ್ನು ನೀಡಲು ಸ್ಥಳದಲ್ಲಿಯೇ ಆದೇಶ ನೀಡಬೇಕು. ಸಾರ್ವಜನಿಕರು ಹೇಳಿಕೆಗಳನ್ನು ಕೇಳಿ ಕೇಳಿ ರೋಸಿ ಹೋಗಿದ್ದಾರೆ. ಹಾಗಾಗಿ ಆದೇಶಗಳು ಬೇಕಾಗಿವೆ, ಮಕ್ಕಳನ್ನು ಮತ್ತು ಮಹಿಳೆಯರನ್ನು ಬೀದಿಯಲ್ಲಿ ಕೂರಿಸುವುದು ಸರ್ಕಾರಕ್ಕೆ ಶೋಭೆ ತರುವಂತಹದ್ದಲ್ಲ, ಜಿಲ್ಲಾ ಸಚಿವರಿಗೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳಿಗೆ ಮಹಿಳೆಯರ ಮೇಲೆ ಗೌರವವಿದ್ದರೆ ತುರ್ತಾಗಿ ಸ್ಥಳದಲ್ಲಿಯೇ ನಿವೇಶನದ ಹಕ್ಕುಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.