ತುಮಕೂರು : ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಮತ್ತು ಡಾ.ಅಶ್ವತ್ಥ್ ನಾರಾಯಣ ಸಾಥ್ ನೀಡಿದರು.
ಶಿರಾ ಮಿನಿ ವಿಧಾನಸೌಧದಲ್ಲಿ ಚುನಾವಣಾ ಅಧಿಕಾರಿ ನಂದಿನಿ ದೇವಿಯವರಿಗೆ ನಾಮಪತ್ರ ಸಲ್ಲಿಸಿದರು. ಸಾವಿರಾರು ಬಿಜೆಪಿ ಕಾರ್ಯಕರ್ತರ ರಾಜೇಶ್ ಗೌಡಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಬಿ.ವೈ ವಿಜಯೇಂದ್ರ, ಭಾರತೀಯ ಜನತಾ ಪಾರ್ಟಿ ಆರ್. ಆರ್ ನಗರ ಮತ್ತು ಶಿರಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿ ಶಿರಾ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ವಿದ್ಯಾವಂತ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂಬ ಆಶಯ ಹೊಂದಿದ್ದಾರೆ. ಕಾಂಗ್ರೆಸ್ನ ಸವಾಲು ಸ್ವೀಕರಿಸಲು ಬಿಜೆಪಿಯ ಎಲ್ಲಾ ಮುಖಂಡರು ಸಿದ್ಧರಿದ್ದೇವೆ. ನಾವು ಜಾತಿ ಆಧಾರದ ಮೇಲೆ ಚುನಾವಣೆ ಎದುರಿಸುವುದಿಲ್ಲ. ಬದಲಾಗಿ ಅಭಿವೃದ್ಧಿ ಆಧಾರದ ಮೇಲೆ ಗೆಲುವು ಸಾಧಿಸುತ್ತೇವೆ ಎಂದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಶಿರಾ ವಿಧಾನಸಭಾ ಕ್ಷೇತ್ರದ ಮತದಾರರು, 70 ವರ್ಷದ ನಂತರ ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಆಡಳಿತವನ್ನು ಮೆಚ್ಚಿ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರಿಗೆ ಮತ ಚಲಾಯಿಸಲಿದ್ದಾರೆ. ಸುಮಾರು 25 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಜೇಶ ಗೌಡ ಗೆಲುವು ಸಾಧಿಸಲಿದ್ದಾರೆ. ಈ ಹಿಂದಿನ ಶಾಸಕರು ಶಿರಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ನಿರ್ಲಕ್ಷಿಸಿದ್ದರು. ಅಭಿವೃದ್ಧಿಗೆ ಹಿಡಿದಿರುವ ಗ್ರಹಣವನ್ನು ನೂತನ ಶಾಸಕರಾಗಿ ಆಯ್ಕೆಯಾಗಲಿರುವ ರಾಜೇಶ್ ಗೌಡ ಬಿಡಿಸಲಿದ್ದಾರೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಮಾತನಾಡಿ, ಶಿರಾ ವಿಧಾನಸಭಾ ಕ್ಷೇತ್ರ ಸಂಪೂರ್ಣ ಕೇಸರಿಮಯವಾಗಿದೆ. ಇಲ್ಲಿ ಖಂಡಿತವಾಗಿಯೂ ಕಮಲ ಅರಳಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬ ನಿರ್ಧಾರವಿದ್ದರೂ, ಅದಕ್ಕೆ ಬದ್ಧವಾಗಿಲ್ಲ. ಹೀಗಾಗಿ, ಮತದಾರರು ಮತ್ತೊಮ್ಮೆ ಕಾಂಗ್ರೆಸ್ಗೆ ಮತ ನೀಡಿದರೆ, ಯಾವುದೇ ಪ್ರಯೋಜನವಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಶಿರಾದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಲ್ಲದೇ ನಂಬಿಕೆ ವಿಶ್ವಾಸವನ್ನು ಕಳೆದುಕೊಂಡಿದೆ ಎಂದರು. ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ , ತುಮಕೂರು ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಮತ್ತಿತರ ಬಿಜೆಪಿ ಮುಖಂಡರು ಹಾಜರಿದ್ದರು.