ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೆ ಸೇತುವೆ ಬಳಿಯ ದ್ವಿಚಕ್ರ ವಾಹನ ಶೋರೂಂ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ ವಾಹನಗಳ ಮಳಿಗೆ ಇದೆ. ಭಾನುವಾರ ರಾತ್ರಿ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ವ್ಯಾಪಿಸಿಕೊಂಡಿದೆ. ಬೆಂಕಿ ಅವಘಟಡದಲ್ಲಿ ಹತ್ತಾರು ಬೈಕ್, ಮಳಿಗೆ ಸಾಮಗ್ರಿಗಳು ಸುಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಕಟ್ಟಡ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು, ಕೆಲಕಾಲ ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು.
ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ಇದುವರೆಗೂ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿರಬಹುದೆಂದು ಶಂಕಿಸಲಾಗುತ್ತಿದೆ.