ಉಡುಪಿ: ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ.
ಆರು ತಿಂಗಳ ಈ ಗರ್ಭಿಣಿ ಮಹಿಳೆಯ ಆರೋಗ್ಯ ಸ್ಥಿತಿ ಅತ್ಯಂತ ಸೂಕ್ಷ್ಮವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಉತ್ತರ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ಕೋವಿಡ್ ರೋಗಿಗಳ ಚಿಕಿತ್ಸೆಗೆಂದೇ ಮೀಸಲಿರುವ ಸುಸಜ್ಜಿತ ಟಿಎಂಎಪೈ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮರೆಯಲಾಗಿತ್ತು. ಆರಂಭಿಕ ಹಂತದಲ್ಲಿ ಇದೊಂದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ನಿರಂತರ ಚಿಕಿತ್ಸೆಯ ನಂತರ 26 ವರ್ಷದ ಈ ಗರ್ಭಿಣಿ ಮಹಿಳೆಯ ಆರೋಗ್ಯ ಸುಧಾರಣೆ ಕಂಡಿದೆ.
ಇದೀಗ ಮಹಿಳೆಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದು, ವರದಿ ನೆಗೆಟಿವ್ ಬಂದಿದೆ. ಎರಡನೇ ವರದಿಯ ನಿರೀಕ್ಷೆಯಿದ್ದು, ಅದೂ ಕೂಡಾ ನೆಗೆಟಿವ್ ಬಂದರೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು ಎಂದು ಡಿಹೆಚ್ಒ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಈವರೆಗೆ ಜಿಲ್ಲೆಯ ಮೂವರು ಕೊರೊನಾ ಸೋಂಕಿತರು ಬಿಡುಗಡೆಯಾಗಿದ್ದು, ಸದ್ಯ ಈ ಮಹಿಳೆಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಹೊಸ ಪಾಸಿಟಿವ್ ಪ್ರಕರಣ ಕಳೆದ 22 ದಿನಗಳಿಂದ ಪತ್ತೆಯಾಗಿಲ್ಲ.