ಕಾರವಾರ: ಭಟ್ಕಳ ತಾಲೂಕಿನ ಗಡಿ ಭಾಗದ ಟೋಲ್ ಗೇಟ್ನಲ್ಲಿ 10 ಕಿ.ಮೀ.ವರೆಗೆ ಸ್ಥಳೀಯರಿಗೆ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿ ಹೋರಾಟ ಸಮಿತಿ ಶಿರೂರು, ಭಟ್ಕಳದ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಟೋಲ್ ಚಲೋ ಅಭಿಯಾನ ಮಾಡಲಾಯಿತು.
ಸಾರ್ವಜನಿಕರ ಪರವಾಗಿ ಬೈಂದೂರು ಶಾಸಕಬೈ ಬಿ.ಎಂ.ಸುಕುಮಾರ ಶೆಟ್ಟಿ ಮನವಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೈಂದೂರು ಕ್ಷೇತ್ರ ಸೇರಿದಂತೆ ಕಾರವಾರದಿಂದ ಕುಂದಾಪುರದವರೆಗೆ ಸಂಪೂರ್ಣ ಕಳಪೆ ಕಾಮಗಾರಿ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದಾಗಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾರ್ವಜನಿಕರ ಬೇಡಿಕೆಗಳನ್ನು ಪೂರೈಸಿದ ಬಳಿಕ ಟೋಲ್ ಆರಂಭಿಸಬೇಕು. ಇಲ್ಲವಾದರೆ ಯಾವುದೇ ಕಾರಣಕ್ಕೂ ಟೋಲ್ ಆರಂಭ ಮಾಡಲು ಬಿಡುವುದಿಲ್ಲ ಎಂದು ಗುಡುಗಿದರು.
ಇನ್ನು ಇದೇ ವೇಳೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಮಳೆಗಾಲದಲ್ಲಿ ವಾಹನ ಸವಾರರು ಪರದಾಡುವಂತಾಗಿದೆ ಎಂದರು. ನಿಗದಿಪಡಿಸಿದ ಸ್ಥಳಗಳಲ್ಲಿ ಸರ್ಕಲ್ ಹಾಗೂ ಡಿವೈಡರ್ಗಳನ್ನು ಅಳವಡಿಸದಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.