ಕಾರವಾರ: ನೌಕಾನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧನ ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದು, ಇದೀಗ ಅವರ ಅಂತ್ಯ ಸಂಸ್ಕಾರ ನಡೆಸಲು ಪರದಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಯೋಧ ಸುಮಿತ್ ಕುಮಾರ್ ಸೆಹೆಗಲ್ ಕಾರವಾರದ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದ ತಾಯಿ ಅನಿತಾ ದೇವಿ ಅವರನ್ನ ಕಳೆದ ಕೆಲ ದಿನಗಳ ಹಿಂದೆ ಕಾರವಾರಕ್ಕೆ ಕರೆ ತಂದು ನೌಕಾನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕೊರೊನಾ ಲಾಕ್ಡೌನ್ ಕಾರಣದಿಂದ ತಾಯಿ ಮೃತದೇಹವನ್ನು ಜಾರ್ಖಂಡ್ಗೆ ಕೊಂಡೊಯ್ಯಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣಗೊಂಡಿದೆ.
ಹೀಗಾಗಿ ಕಾರವಾರದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದು, ಅದರಂತೆ ಚೆಂಡಿಯಾ ಗ್ರಾಮ ಪಂಚಾಯಿತಿ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕಾಗಿ ಅನುಮತಿ ಸಹ ಪಡೆದುಕೊಂಡಿದ್ದರು. ಆದರೆ ಅರಗಾ ಮತ್ತು ಚೆಂಡಿಯಾದ ಸಾರ್ವಜನಿಕರು ತಮ್ಮೂರಿನ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೊನಾ ಆತಂಕವಿರುವ ಕಾರಣ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ. ತಾಯಿಗೆ ಕೊರೊನಾ ಟೆಸ್ಟ್ ನಡೆಸಿದ್ದಾಗಿ ಯೋಧ ತಿಳಿಸಿದ್ದು, ಆದರೂ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸಂಸ್ಕಾರ ನಡೆದಿಲ್ಲ. ಸ್ಥಳಕ್ಕೆ ತೆರಳಿದ ಪೊಲೀಸರು ಕೂಡ ಸ್ಥಳೀಯರ ಮನವೊಲಿಸಲು ಪ್ರಯತ್ನಿದ್ದು, ಆದರೂ ಪ್ರಯೋಜನವಾಗಿಲ್ಲ.
ಇದೀಗ ಯೋಧ ಪೊಲೀಸರು ಹಾಗೂ ಅಧಿಕಾರಿಗಳ ಬಳಿ ಅಂಗಲಾಚಿದ್ದು, ತಾಯಿಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡುತ್ತಿದ್ದಾನೆ.