ಕಾರವಾರ (ಉತ್ತರಕನ್ನಡ): ನಮ್ಮ ಸರ್ಕಾರದಲ್ಲಿ ಹಿಟ್ಲರ್ ಆಡಳಿತ ಈವರೆಗೂ ಬಂದಿಲ್ಲ. ಮುಂದೆಯೂ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ಗೆ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 'ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು.
ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿಗೆ ತಲುಪುತ್ತದೆ ಗೊತ್ತಿಲ್ಲ ಎಂದು ಟ್ವೀಟ್ ಮಾಡಿದ್ದರು.
ಈ ವಿಷಯವಾಗಿ ಕಾರವಾರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರಕ್ಕೆ ಹಣ ಕೊಡದವರ ಮನೆಯನ್ನು ಗುರುತು ಮಾಡುತ್ತಿದ್ದಾರೆ ಎನ್ನುವುದು ಸುಳ್ಳು. ಕುಮಾರಸ್ವಾಮಿ ರಾಜಕೀಯ ಪ್ರೇರಿತ, ಆಧಾರವಿಲ್ಲದ ಹೇಳಿಕೆ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣದಲ್ಲಿ ಎಲ್ಲೂ ರಾಜಕೀಯ ಬೇಡ ಎಂದು ಹೇಳಿದರು.
ನಮ್ಮ ಸರ್ಕಾರದಲ್ಲಿ ಹಿಟ್ಲರ್ ಆಡಳಿತ ಈವರೆಗೂ ಬಂದಿಲ್ಲ, ಮುಂದೆಯೂ ಬರುವುದಿಲ್ಲ. ಕುಮಾರಸ್ವಾಮಿ ಪಬ್ಲಿಸಿಟಿ ಸಲುವಾಗಿ ಆಧಾರರಹಿತ ಹೇಳಿಕೆ ಕೊಟ್ಟಿದ್ದಾರೆ. ಹಣ ಸಂಗ್ರಹಿಸಲು ಯಾರಿಗೂ ಒತ್ತಾಯ ಹಾಕಿಲ್ಲ.
ಕುಮಾರಸ್ವಾಮಿ ಮನಸ್ಸಿನಲ್ಲಿಯೂ ರಾಮ ಮಂದಿರ ಆಗಬೇಕೆಂಬ ಭಯಕೆ ಇದೆ. ಅವರ ಪಕ್ಷದ ಶಾಸಕರು ಸೇರಿದಂತೆ ಅಲ್ಪಸಂಖ್ಯಾತರು ಮಂದಿರ ನಿರ್ಮಾಣಕ್ಕೆ ಹಣ ಕೊಟ್ಟಿದ್ದಾರೆ. ಕುಮಾರಸ್ವಾಮಿ ಸಹ ಮುಂದೆ ಹಣಕೊಡಬಹುದು ಎಂದು ಶ್ರೀರಾಮುಲು ಹೇಳಿದ್ದಾರೆ.