ಭಟ್ಕಳ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಭಟ್ಕಳ ತಾಲೂಕಿಗೆ ತುರ್ತು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಒಂದು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.
2019-20 ನೇ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಗೆ ಪರಿಹಾರ ನೀಡಲು ಸರ್ಕಾರ 4.89 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಜಿಲ್ಲಾಡಳಿತದ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಯಿಂದ ಕೊರೊನಾ ತಡೆಗೆ ಹಣವನ್ನು ಬಳಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ನೀಡಿರುವುದರಿಂದ, ಭಟ್ಕಳ ಉಪವಿಭಾಗಾಧಿಕಾರಿ ಖಾತೆಗೆ ಒಂದು ಕೋಟಿ ಹಣವನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ.
ಹೆಲ್ತ್ ಎಮರ್ಜೆನ್ಸಿ ಇರುವ ಹಿನ್ನಲೆಯಲ್ಲಿ ಸೋಂಕು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಅಧಿಕಾರವನ್ನು ಭಟ್ಕಳ ಉಪವಿಭಾಗಾಧಿಕಾರಿಗೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಒಂದು ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕು ತಡೆಯಲು ಮಾತ್ರ ಹಣವನ್ನು ಬಳಸಿಕೊಳ್ಳಬೇಕು, ಬೇರೆ ಯಾವ ಉದ್ದೇಶಕ್ಕೂ ಬಳಸಿಕೊಳ್ಳಬಾರದು, ಒಂದೊಮ್ಮೆ ಬಳಸಿಕೊಂಡರೆ ಅದಕ್ಕೆ ಹೊಣೆ ಉಪವಿಭಾಗಾಧಿಕಾರಿಗಳೇ ಆಗಿರುತ್ತಾರೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.