ಕಾರವಾರ : ವಿರೋಧದ ನಡುವೆಯೂ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಹೊನ್ನಾವರದ ಕಾಸರಕೋಡು ಬಂದರು ಬಳಿ ನಡೆದಿದೆ.
ಹೊನ್ನಾವರ ಖಾಸಗಿ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ, ಭಾನುವಾರ ಮೀನುಗಾರರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆ ನಿರ್ಮಾಣ ಮಾಡಲಾಗುವುದು ಎಂದಿದ್ದರು. ಆದರೆ, ಇದಕ್ಕೆ ಸಭೆಯಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.
ಸೋಮವಾರ ಪೊಲೀಸ್ ಭದ್ರತೆಯಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದು, ಸ್ಥಳೀಯ ಮೀನುಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇಂದು ರಸ್ತೆಯ ಮೇಲೆ ಕುಳಿತು ಕಾಮಗಾರಿಗೆ ತಡೆಯೊಡ್ಡಿ ನೂರಾರು ಮೀನುಗಾರರು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮೀನುಗಾರರನ್ನು ಮನವೊಲಿಸಲು ಯತ್ನಿಸಿದರು ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆಗೆ ಅಡ್ಡ ಕುಳಿತ ಮೀನುಗಾರರನ್ನು ಒತ್ತಾಯ ಪೂರ್ವಕವಾಗಿ ಎಬ್ಬಿಸಿ ವಶಕ್ಕೆ ಪಡೆದರು.
ಈ ವೇಳೆ ಮೀನುಗಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರ ಕ್ರಮಕ್ಕೆ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹೋರಾಟವನ್ನು ತೀವ್ರಗೊಳಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ