ಶಿರಸಿ: ಫ್ರಾನ್ಸ್ನ ನಾರ್ಮಂಡಿಲ್ಲಿ ನಡೆದ 19ನೇ ಆವೃತ್ತಿಯ ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಯಲ್ಲಿ 70 ದೇಶಗಳ 3,500 ಕ್ರೀಡಾಪಟುಗಳು ಭಾಗವಹಿಸಿದ್ದರು. ಶಿರಸಿ ಲಯನ್ಸ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಪ್ರೇರಣಾ ನಂದಕುಮಾರ್ ಶೇಟ್ ಬ್ಯಾಡ್ಮಿಂಟನ್ನಲ್ಲಿ ಬಂಗಾರದ ಪದಕ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾಳೆ. ರಾಷ್ಟ್ರವೇ ಹೆಮ್ಮೆ ಪಡುವ ಸಾಧನೆ ಮಾಡಿದ ಪ್ರೇರಣಾ ಅವರನ್ನು ತವರೂರು ಶಿರಸಿಯಲ್ಲಿ ಸೋಮವಾರ ತೆರೆದ ಜೀಪ್ನಲ್ಲಿ ಮೆರವಣಿಗೆ ಮಾಡಿ ಅದ್ದೂರಿ ಸ್ವಾಗತ ಕೋರಲಾಯಿತು.
ಬಳಿಕ ನಗರದ ಲಯನ್ಸ್ ಸಭಾಂಗಣದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ದೇಶದ ಹಾಗೂ ಶಿರಸಿಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಪ್ರೇರಣಾಳ ಸಾಧನೆ ನಿಜಕ್ಕೂ ಶ್ಲಾಘನೀಯ. ಸರ್ಕಾರದಿಂದ 2 ಲಕ್ಷ ರೂ ನೀಡಲಾಗುವುದು. ಅವರ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಸಹಕರಿಸುತ್ತೇವೆ. ಶಿಕ್ಷಣ ಸಂಸ್ಥೆಗಳು ಅಂಕ ಗಳಿಸುವುದಕ್ಕೆ ಕೊಡುವ ಪ್ರೋತ್ಸಾಹದ ಕೆಲವು ಅಂಶಗಳನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಿದರೆ ಇಂತಹ ಅದೆಷ್ಟೋ ಪ್ರತಿಭೆಗಳು ಬೆಳಕಿಗೆ ಬರುತ್ತಾರೆ ಎಂದರು.
ಬ್ಯಾಡ್ಮಿಂಟನ್ ತಾರೆ ಪ್ರೇರಣಾ ಮಾತನಾಡಿ, ನನ್ನ ಈ ಸಾಧನೆಗೆ ಲಯನ್ಸ್ ಶಾಲೆಯ ಶಿಕ್ಷಕರು ಹಾಗೂ ತರಬೇತಿದಾರರು ಸಾಕಷ್ಟು ಪ್ರೋತ್ಸಾಹ ನೀಡಿದ್ದಾರೆ. ತಾಯಿ, ತಂದೆ ನನಗೆ ಸದಾ ಸಹಕಾರ ನೀಡುತ್ತಿದ್ದಾರೆ. ಅವರೆಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ಐಐ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ, ಲಯನ್ಸ್ ಶಾಲೆಯ ಮುಖ್ಯ ಶಿಕ್ಷಕ ಶಶಾಂಕ್ ಹೆಗಡೆ, ಡಿವೈಎಸ್ಪಿ ರವಿನಾಯ್ಕ, ಸರ್ಕಾರದ ವಿವಿಧ ಇಲಾಖೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.