ವಿಜಯಪುರ: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸೈಕ್ಲಿಂಗ್ ವೆಲೋಡ್ರಮ್ ಕಾಮಗಾರಿಯನ್ನು 6 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆ ಬಗೆಹರಿಸಿ ಕಾಮಗಾರಿ ಮಾಡಬೇಕು. ಇಲ್ಲವಾದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಕ್ರೀಡಾ ಸಚಿವ ಡಾ. ನಾರಾಯಣಗೌಡ ಎಚ್ಚರಿಸಿದರು.
ನಗರದ ಹೊರವಲಯದ ಭೂತನಾಳ ಕೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ವೆಲೋಡ್ರಮ್ ಕಾಮಗಾರಿ ನೆನೆಗುದಿಗೆ ಬಿದ್ದಿರುವದನ್ನು ಪರಿಶೀಲನೆ ನಡೆಸಿದರು. ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವೆಲೋಡ್ರಮ್ ಕಾಮಗಾರಿ ತಕ್ಷಣ ಆರಂಭಿಸಿ 6 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಂತಹ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಸಚಿವರನ್ನು ಭೇಟಿಯಾದ ಸೈಕ್ಲಿಸ್ಟ್ಗಳು ತಮ್ಮ ಸಮಸ್ಯೆ ಹೇಳಿಕೊಂಡರು. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಸೈಕ್ಲಿಸ್ಟ್ಗಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.
ಸ್ಥಳೀಯ ಜನಪ್ರತಿನಿಧಿಗಳು ಗೈರು
ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಸಿಂಥೆಟಿಕ್ ಟ್ರ್ಯಾಕ್ ಉದ್ಘಾಟನಾ ಸಮಾರಂಭಕ್ಕೆ ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಗೈರಾಗಿರುವುದಕ್ಕೆ ಸಮಜಾಯಿಷಿ ನೀಡಿದ ಸಚಿವ ನಾರಾಯಣಗೌಡ, ಯತ್ನಾಳ ದೆಹಲಿಗೆ ಹೋಗಿದ್ದಾರೆ. ಕೆಲವರಿಗೆ ಅವರದ್ದೆ ಕಾರ್ಯಕ್ರಮ ಇರುತ್ತದೆ. ಈಗ ಸಿಂಥೆಟಿಕ್ ಟ್ರ್ಯಾಕ್ ಪ್ರಾಯೋಗಿಕವಾಗಿ ಉದ್ಘಾಟಿಸುತ್ತೇನೆ. ಮುಂದಿನ ದಿನ ದೊಡ್ಡ ಕಾರ್ಯಕ್ರಮ ಆಯೋಜಿಸಿ ಎಲ್ಲರನ್ನು ಕರೆಸಿ ಮತ್ತೊಮ್ಮೆ ಉದ್ಘಾಟಿಸುವೆ ಎಂದರು.