ವಿಜಯಪುರ: ಉಪಚುನಾವಣೆಯಲ್ಲಿ ಅಥಣಿ ಸೇರಿದಂತೆ ಕೆಲವು ಕ್ಷೇತ್ರದಲ್ಲಿ ಮೊದಲು ನಕಾರಾತ್ಮಕ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ನೀರಾವರಿ ವಿಚಾರವಾಗಿ ಮತದಾರರು ಬಿಜೆಪಿಗೆ ಮತ ಹಾಕಿದ್ದಾರೆ. ಕೆ. ಆರ್ ಪೇಟೆ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಖಾತೆ ತೆರೆದಿರುವುದಕ್ಕೆ ಯಡಿಯೂರಪ್ಪ ಅವರ ಪ್ರಚಾರವೇ ಕಾರಣ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ನನಗೆ ಜವಾಬ್ದಾರಿ ಕೊಟ್ಟು ಸಚಿವ ಸ್ಥಾನ ನೀಡಿದ್ರೆ, ಉತ್ತಮವಾಗಿ ಕೆಲಸ ಮಾಡುತ್ತೇನೆ. ಇಲ್ಲದಿದ್ರೆ ಕಾರ್ಯಕರ್ತನಾಗಿ ಕೆಲಸ ಮಾಡುವೆ. ಮೊದಲು ಉಪ ಚುನಾವಣೆಯಲ್ಲಿ ಗೆದ್ದವರಿಗೆ ಅವಕಾಶ ನೀಡಲಿ. ಜನರ ಮನಸ್ಸಿನಲ್ಲಿ ನಾನು ಇದ್ದೇನೆ. ನಾನು ಪ್ರಚಾರ ಮಾಡಿದ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ರು.
ರಾಜ್ಯದಲ್ಲಿ ಡಿಸಿಎಂ ಹುದ್ದೆ ಹೆಚ್ಚಾಗಬಾರದು. ಹೆಚ್ಚು ಡಿಸಿಎಂ ಹುದ್ದೆಗಳಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಕಿರುಕುಳವಾಗುತ್ತದೆ. ಸಿಎಂ ಯಡಿಯೂರಪ್ಪನವರಿಗೆ ಎಲ್ಲವನ್ನು ನಿಭಾಯಿಸುವ ಸಾಮರ್ಥ್ಯವಿದೆ. ಜಲ ಸಂಪನ್ಮೂಲ ಖಾತೆ ಉತ್ತರ ಕರ್ನಾಟಕಕ್ಕೆ ಸಿಕ್ಕರೆ ಅನುಕೂಲವಾಗುತ್ತದೆ. ಈ ಭಾಗದ ನೀರಾವರಿ ಕಾಮಗಾರಿಗಳು, ಕೃಷ್ಣ ಮೇಲ್ದಂಡೆ ಯೋಜನೆಗೆ ಅನುಕೂಲವಾಗುತ್ತದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ನೀರಾವರಿ ಖಾತೆ ನೀಡಿದ್ರೆ ಒಳ್ಳೆಯದು ಎಂದರು.
ರಾಷ್ಟ್ರೀಯ ಪೌರತ್ವ ಕಾಯ್ದೆ ಜಾರಿಗೆ ಬೆಂಬಲ ಕುರಿತು ಮಾತನಾಡಿದ ಶಾಸಕ ಬಸನಗೌಡ ಯತ್ನಾಳ, ಪಾಕಿಸ್ತಾನ ಇಬ್ಭಾಗವಾದಾಗ ಲಕ್ಷಾಂತರ ಹಿಂದೂಗಳ ಕಗ್ಗೊಲೆ ಆಯಿತು. ನಂತರ ಅಲ್ಲಿ ಹಿಂದೂಗಳ ಸಂಖ್ಯೆ ಇಳಿಕೆಯಾದೆ. ಇಂತಹ ದೌರ್ಜನ್ಯಕ್ಕೆ ಒಳಗಾದವರಿಗೆ ಈ ಕಾಯ್ದೆ ಅನುಕೂಲವಾಗಲಿದೆ. ಯಾವುದೇ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದರೆ ಈ ಕಾಯ್ದೆ ಅವರಿಗೆ ಅನುಕೂಲವಾಗಲಿದೆ. ಉಪಚುನಾವಣೆಯಲ್ಲಿ ಸೋತ ಕಾರಣಕ್ಕೆ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಮುಗಿಯುವುದಿಲ್ಲ, ಒಂದು ಚುನಾವಣೆಯಲ್ಲಿ ಸೋತರೆ ರಾಜಕೀಯ ಮುಗಿಯುವುದಿಲ್ಲ ಎಂದು ಭಾವಿಸಿದರು.