ವಿಜಯಪುರ: ರಾಜ್ಯ ಸರ್ಕಾರ ಪಠ್ಯ ಕ್ರಮದಲ್ಲಿ ಟಿಪ್ಪು ಸುಲ್ತಾನ್ ಚರಿತ್ರೆಯನ್ನು ಪಠ್ಯದಿಂದ ಕೈಬಿಟ್ಟಿದಕ್ಕೆ ಭೀಮ ಆರ್ಮಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಭೀಮ ಆರ್ಮಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಬ್ರಿಟಿಷರ ವಿರುದ್ಧ ದೇಶಕ್ಕಾಗಿ ಹೋರಾಟ ನಡೆಸಿದ ಟಿಪ್ಪುವಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದರು. ಅಲ್ಲದೇ ಕೆಆರ್ಎಸ್ ಜಲಾಶಯ ನಕ್ಷೆ ಕೂಡ ಟಿಪ್ಪು ಆಡಳಿತ ಅವಧಿಯಲ್ಲಿ ತಯಾರಿಸಲಾಗಿದೆ. ಸಮಾಜಮುಖಿ ಕಾರ್ಯಗಳನ್ನ ಕೈಗೊಂಡ ಟಿಪ್ಪುವಿನ ಇತಿಹಾಸ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಪಠ್ಯಕ್ರಮದಲ್ಲಿ ಅಳವಡಿಕೆ ಮಾಡಲಾಗಿತ್ತು. ಆದ್ರೆ ರಾಜ್ಯ ಬಿಜೆಪಿ ಸರ್ಕಾರ ಪಠ್ಯದಲ್ಲಿ ಅವರ ಇತಿಹಾಸ ಕಡಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಟಿಪ್ಪು ಇತಿಹಾಸ ವಿದ್ಯಾರ್ಥಿಗಳಿಗೆ ತಿಳಿಯುವಂತಾಗಬೇಕು. ತಕ್ಷಣವೇ ಶಿಕ್ಷಣ ಸಚಿವರು ಟಿಪ್ಪು ಇತಿಹಾಸವನ್ನು ಪಠ್ಯದಲ್ಲಿ ಅಳವಡಿಕೆ ಮಾಡಲು ಮುಂದಾಗಬೇಕು. ಇಲ್ಲವಾದರೆ ಭೀಮ ಆರ್ಮಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.