ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿ. ಹೆಚ್. ಗ್ರಾಮದಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಮತ್ತು ಎಸ್ಪಿ ಅನುಪಮ ಅಗರವಾಲ್ ಬೂದಿಹಾಳ ಪಿ.ಹೆಚ್ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದರು.
ದಲಿತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ಕುಟುಂಬಕ್ಕೆ 4,12,500 ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಇದರ ಜೊತೆಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ನೊಂದ ಕುಟುಂಬಕ್ಕೆ ಮಂಜೂರಿಸಲಾಗುವುದು ಮತ್ತು ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ನೌಕರಿ ನೀಡಲಾಗುವುದು ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಭೂಮಿ ಸಹ ನೀಡಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಮಾತನಾಡಿ, ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಿಂದಗಿ ತಾಲೂಕಿನ ತಹಶೀಲ್ದಾರ್ ಸಂಜೀವ ಕುಮಾರ ದಾಸರ, ಸಿಪಿಐ ಪಟೇಲ, ಪಿಎಸ್ಐ ಸಂಗಮೇಶ ಹೊಸಮನಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಾನಾ ಸಂಘಟನೆಗಳ ಮುಖಂಡರು ಮಾತನಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.