ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟಂ ಟಂ ವಾಹನ ಪಲ್ಟಿಯಾದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಬಳಿ ನಡೆದಿದೆ.
ಬಂಥನಾಳದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಾಂಬಾದಿಂದ ಬಂಥನಾಳಕ್ಕೆ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಂಬಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಟ ಮುಗಿಸಿಕೊಂಡು ಹೋಗುವಾಗ ಈ ಅವಘಡ ಸಂಭವಿಸಿದೆ.
ಒಂದೇ ಟಂಟಂನಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತುಂಬಿಸಿದ್ದ ಬಂಥನಾಳ ಶಾಲೆ ಶಿಕ್ಷಕರ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುರಿಗಳನ್ನು ತುಂಬಿದಂತೆ ವಿದ್ಯಾರ್ಥಿಗಳನ್ನು ವಾಹನದಲ್ಲಿ ತುಂಬಿಸಿ ಕಳುಹಿಸಿದ್ದರಿಂದಲೇ ಈ ದುರ್ಘಟನೆ ನಡೆದಿದೆ. ನಿರ್ಲಕ್ಷ್ಯ ವಹಿಸಿದ ಶಿಕ್ಷಕರನ್ನು ಅಮಾನತುಗೊಳಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.
ಇಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.