ಬೆಂಗಳೂರು: ಐತಿಹಾಸಿಕ ಕಲಬುರಗಿ ಕೋಟೆ ಸಂರಕ್ಷಣೆ ವಿಚಾರವಾಗಿ ಕ್ರಮಕೈಗೊಳ್ಳದ ಜಿಲ್ಲಾಧಿಕಾರಿ ನಡೆಗೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್ ಸಂರಕ್ಷಿತ ಪ್ರದೇಶದಲ್ಲಿ ನೆಲೆಸಿರುವ ಅಕ್ರಮ ವಾಸಿಗಳನ್ನು ತೆರವುಗೊಳಿಸುವುದಕ್ಕೂ, ಸಾಹಿತ್ಯ ಸಮ್ಮೇಳನಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದೆ.
ಕೋಟೆ ಸಂರಕ್ಷಣೆ ಮಾಡಲು ಸಂಬಂಧಿತ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕು ಎಂದು ಕೋರಿ ಶರಣ್ ದೇಸಾಯಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಭಾರತೀಯ ಪುರಾತತ್ವ ಇಲಾಖೆ ಪರ ವಾದಿಸಿದ ಸಹಾಯಕ ಸಾಲಿಸಿಟರ್ ಜನರಲ್ ಸಿ. ಶಶಿಕಾಂತ್ ಅವರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಕೋಟೆಯ ಸಂರಕ್ಷಿತ ಪ್ರದೇಶದಲ್ಲಿರುವ 282 ಒತ್ತುವರಿದಾರರು ಹಾಗೂ ಅಕ್ರಮ ವಾಸಿಗಳಿಗೆ ಈಗಾಗಲೇ ನೋಟಿಸ್ ನೀಡಿ ಅವರ ಅಹವಾಲುಗಳನ್ನು ಪರಿಶೀಲಿಸಲಾಗಿದೆ. ಒತ್ತುವರಿ ತೆರವುಗೊಳಿಸಲು 2019ರ ಡಿಸೆಂಬರ್ 4 ಮತ್ತು 5ರಂದು ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಅಲ್ಲಿನ ಜಿಲ್ಲಾಧಿಕಾರಿ ಮುಂದಿನ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ಸಾಲಿಸಿಟರ್ ಜನರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪೀಠ ಒತ್ತುವರಿದಾರರ ತೆರವಿಗೆ ಜಿಲ್ಲಾಧಿಕಾರಿ ಇನ್ನೂ ಏಕೆ ಕ್ರಮ ಜರುಗಿಸಿಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸರ್ಕಾರಿ ವಕೀಲ ಬಾಲರಾಜು, ಮುಂದಿನ ತಿಂಗಳು ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಜಿಲ್ಲಾಧಿಕಾರಿ ಅದರ ಸಿದ್ಧತೆಯಲ್ಲಿ ಇರುವುದರಿಂದ ತಡವಾಗಿದೆ ಎಂದು ಸಮಜಾಯಿಷಿ ನೀಡಿದರು. ಇದನ್ನು ಒಪ್ಪದ ಪೀಠ, ಸಾಹಿತ್ಯ ಸಮ್ಮೇಳನಕ್ಕೂ ಒತ್ತುವರಿ ತೆರವಿಗೂ ಸಂಬಂಧವೇನು. ಕಾರಣಗಳು ಏನೇ ಇದ್ದರೂ ಜಿಲ್ಲಾಧಿಕಾರಿ 282 ಒತ್ತುವರಿದಾರರ ತೆರವಿಗೆ ವೇಳಾಪಟ್ಟಿ ಸಿದ್ಧಪಡಿಸಿ ಅದನ್ನು ಮುಂದಿನ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿತು.