ವಿಜಯಪುರ: ಸರ್ಕಾರದ ನಿರ್ದೇಶನದಂತೆ ಹೆಚ್ಚಿನ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಲಕ್ಷಣಗಳುಳ್ಳವರಿಗೆ ಈ ಟೆಸ್ಟ್ನಲ್ಲಿ ನೆಗೆಟಿವ್ ವರದಿ ಬಂದಲ್ಲಿ ಆರ್ಟಿಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ತಾಲೂಕು ಹಾಗೂ ನಗರಗಳಿಗೆ ಗುರಿ ನಿಗದಿಪಡಿಸಲಾಗಿದೆ. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದರಂತೆ ನಿನ್ನೆಯವರೆಗೆ ಸುಮಾರು 2,000 ಟೆಸ್ಟ್ ಮಾಡಲಾಗಿದೆ. ಅದರಲ್ಲಿ ಸುಮಾರು ಶೇ.7-12ರಷ್ಟು ಪ್ರಮಾಣದಲ್ಲಿ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಪ್ರಕರಣಗಳು ಕಂಡುಬರುತ್ತಿವೆ. ಈ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಸುವಂತೆ ಸೂಚಿಸಲಾಗಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.