ವಿಜಯಪುರ:ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಡಾ.ಸುನೀತಾ ಚವ್ಹಾಣ ಅವರನ್ನು ಗೆಲ್ಲಿಸಲು ಕಾಂಗ್ರೆಸ್-ಜೆಡಿಎಸ್ ನಾಯಕರು ಸಾಮೂಹಿಕ ನಾಯಕತ್ವದಲ್ಲಿ ಪ್ರಚಾರ ನಡೆಸಲಿದ್ದೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ
ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಹೋಮ್ ಮಿನಿಸ್ಟರ್ ಎಂ.ಬಿ.ಪಾಟೀಲ್, ಪ್ರತಿ ಕ್ಷೇತ್ರದಲ್ಲಿ ಉಭಯ ನಾಯಕರು ಪ್ರಚಾರ ನಡೆಸಲಿದ್ದೇವೆ. 10 ವರ್ಷದಿಂದ ಸಂಸದರಾಗಿರುವ ಬಿಜೆಪಿ ಅಭ್ಯರ್ಥಿ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೋಟ್ ಬ್ಯಾನ್, ಜಿಎಸ್ಟಿ ತಂದು ಜನಸಾಮಾನ್ಯರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪ್ರತಿಯೊಬ್ಬರ ಅಕೌಂಟ್ಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಹೇಳಿದ್ದವರು, ಐದು ವರ್ಷವಾದರೂ 15 ಪೈಸೆ ಸಹ ಹಾಕಲಿಲ್ಲ. ಕೇವಲ ಸುಳ್ಳು ಹೇಳುವುದರಲ್ಲಿ ಕಾಲ ಕಳೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಭಿನ್ನಾಭಿಪ್ರಾಯವಿಲ್ಲ :
ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ - ಜೆಡಿಎಸ್ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿ ಡಾ. ಸುನಿತಾ ಚವ್ಹಾಣ ಅವರನ್ನು ಕನಿಷ್ಠ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದರು.