ಮುದ್ದೇಬಿಹಾಳ: ನೀವು ಮೀಸಲಾತಿ ಕೊಡದಿದ್ದರೆ ನಿಮ್ಮನ್ನು ಮುಖ್ಯಮಂತ್ರಿ ಖುರ್ಚಿಯಿಂದ ಕೆಳಗಿಳಿಸಲಾಗುವುದು. ಮುಂದೆ ನಿಮ್ಮ ಮಗನನ್ನು ಮುಖ್ಯಮಂತ್ರಿಯಾಗುವುದಕ್ಕೆ ಅವಕಾಶ ಕೊಡುವುದಿಲ್ಲ. ಸ್ಪಂದಿಸದಿದ್ದರೆ ನಾವು ಬಾರುಕೋಲು ಹಿಡಿಯಬೇಕಾಗುತ್ತದೆ. ಇದು ಒಬ್ಬ ಜವಾಬ್ದಾರಿಯುತ ಪೀಠದಲ್ಲಿರುವ ಸ್ವಾಮೀಗಳು ಸಂವಿಧಾನಾತ್ಮಕ ಹುದ್ದೆಯ ಬಗ್ಗೆ ಹಗುರವಾಗಿ ಮಾತನಾಡಿ ಸಂವಿಧಾನಕ್ಕೆ ಅಪಚಾರ ಎಸಗುತ್ತಿದ್ದಾರೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು.
ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾ ಹಾಗೂ ತಾಲೂಕಾ ಘಟಕಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 158ನೇ ಜಯಂತ್ಯುತ್ಸವದ ಪ್ರಯುಕ್ತ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಒಬ್ಬ ರಾಜ್ಯದ ಮುಖ್ಯಮಂತ್ರಿ ಎಂದ ಮೇಲೆ ಆತ ಯೋಗ್ಯನಿರಲಿ, ಅಯೋಗ್ಯನಿರಲಿ ಸಂವಿಧಾನಾತ್ಮಕವಾಗಿ ಅವರನ್ನು ಗೌರವಿಸಬೇಕಾಗುತ್ತದೆ. ರಾಜ್ಯದಲ್ಲಿ ನಮ್ಮ ಸಮುದಾಯಕ್ಕೆ ಮೀಸಲಾತಿ ಕೊಟ್ಟರೆ ನಿಮ್ಮ ವಂಶಪಾರಂಪರೆಯ ಆಡಳಿತ ಒಪ್ಪುತ್ತೇವೆ. ಸಮುದಾಯವನ್ನು ಪ್ರತಿನಿಧಿಸುವ ಸ್ವಾಮೀಜಿಗಳು ಈ ರೀತಿ ಹೇಳುವುದು, ಜಾತಿಭ್ರಮೆಯಿಂದ ಸಂವಿಧಾನಕ್ಕೆ ಅಪಚಾರವಾಗುತ್ತದೆ ಎಂದು ಅವರು ಹೇಳಿದರು.
ಸಮಾರಂಭ ಉದ್ಘಾಟಿಸಿದ ಆಹಾರ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಮಾತನಾಡಿ, ನಿಜವಾದ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಮಾದರಿ ಕಾರ್ಯಕ್ರಮ ಮಾಡಿದ್ದೀರಿ. ಸಾಧಕರು ಜನರ ಮನಸ್ಸಿನಲ್ಲಿ ಉಳಿಯುವ ಸಾಧನೆ ಮಾಡಬೇಕು ಎಂದರು.
ಕುಂಟೋಜಿ ಹಿರೇಮಠದ ಚೆನ್ನವೀರ ದೇವರು, ಬಾಗಲಕೋಟೆ-ಚಿತ್ರದುರ್ಗ ಇಮ್ಮಡಿ ಗುರುಪೀಠದ ಸಿದ್ಧರಾಮೇಶ್ವರ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಒಟ್ಟು 36 ಸಾಧಕರಿಗೆ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೇಷಧಾರಿ ಗಮನ ಸೆಳೆದರು.