ಯಾದಗಿರಿ: ಏಕಲವ್ಯ ವಸತಿ ಶಾಲೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ನೀಡಿದ್ದರೂ ಕೂಡ ತನ್ನನ್ನು ಆಹ್ವಾನಿಸಿಲ್ಲವೆಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಸುಳ್ಳಿನ ನಾಟಕವಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಭಾನುವಾರ ಸಚಿವ ಶ್ರೀರಾಮುಲು ಅವರು ಜಿಲ್ಲೆಯ ಏಕಲವ್ಯ ಮಾದರಿ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಸಂದರ್ಭದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಉದ್ಘಾಟನೆ ಮಾಡದಂತೆ ಸಚಿವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಧಿಕಾರಿಗಳು ನನ್ನನ್ನು ಕಡೆಗಣಿಸಿದ್ದಾರೆ. ನಾನೇ ನಿಯೋಜಿಸಿದ ಅಧಿಕಾರಿಗಳು ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರನ್ನು ಹಿಂದಕ್ಕೆ ಕಳುಹಿಸಿದ್ದರು.
ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸವ ಅವರು ಬೆಂಗಳೂರಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಅಧಿಕಾರಿಗಳ ವರದಿಯ ಪತ್ರದಲ್ಲಿ ಯಾವುದೇ ಲೋಪವಾಗಿಲ್ಲ, ಮಾಜಿ ಸಚಿವರನ್ನು ಸಹ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯಲ್ಲಿ ತನ್ನನ್ನು ಕಡೆಗಣನೆ ಮಾಡುತ್ತಿದ್ದಾರೆಂದು ಬಾಬುರಾವ್ ಚಿಂಚನಸೂರ್ ಈ ರೀತಿ ಮಾಡಿದ್ದಾರೆ ಎನ್ನಲಾಗ್ತಿದೆ. ಅಧಿಕಾರಿಗಳ ವಿರುದ್ಧ ಸುಳ್ಳು ಹೇಳಿ, ಬಿಜೆಪಿಗೂ ಮುಜುಗರವನ್ನುಂಟು ಮಾಡುವ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ.