ಗುರುಮಠಕಲ್: ತಾಲೂಕಿನ ಎಲ್ಲ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ, ಕೊರೊನಾ ಸಂಕಷ್ಟ ಸಮಯದಲ್ಲಿ ಜನರಿಗೆ ಸಹಾಯ ಮಾಡುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೂಚಿಸಿದರು.
ನೂತನ ತಾಲೂಕು ರಚನೆಯಾದ ನಂತರ ಪುರಸಭೆಯ ಸಭಾಂಗಣದಲ್ಲಿ ನಡೆದ ಪ್ರಥಮ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಪಂಚಾಯತ್ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ವಿದ್ಯುತ್, ರಸ್ತೆ, ಅಂಗನವಾಡಿ ಕಟ್ಟಡ, ಶಾಲಾ ಕಟ್ಟಡಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
ತಾಲೂಕು ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ಅರುಣಿ, ಹಾಗೂ ಭಾಸ್ಕರರೆಡ್ಡಿ, ಗ್ರಾಮಗಳಲ್ಲಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಿದರೂ ಸೂಕ್ತ ನಿರ್ವಹಣೆ ಇಲ್ಲದೆ ಹಾಳಾಗುತ್ತಿವೆ. ಇದರಿಂದ ಗ್ರಾಮೀಣ ಜನರಿಗೆ ಶುದ್ಧ ನೀರು ಸಿಗುವ ಯೋಜನೆ ವಿಫಲವಾಗಿದೆ, ಅವುಗಳನ್ನು ಶೀಘ್ರವೇ ದುರಸ್ತಿಗೊಳಿಸುವಂತೆ ಆಗ್ರಹಿಸಿದರು.
ಕೆಲವು ಗ್ರಾಮಗಳಲ್ಲಿ ವಿದ್ಯುತ್ ತಂತಿಗಳು ಮನೆ ಮೇಲೆಯೇ ಹಾದು ಹೋಗಿದ್ದು, ಹಲವಾರು ಬಾರಿ ವಿದ್ಯುತ್ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲಎಂದು ದೂರಿದರು. ಕೂಡಲೆ ಆಡಳಿತಾಧಿಕಾರಿಗಳು ಇದಕ್ಕೆ ಸ್ಪಂದಿಸಿ, ಈ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಸೂಚಿಸಿದ ಅವರು, ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ಪೂರ್ಣಗೋಳಿಸುವಂತೆ ಭೂ ಸೇನಾ ನಿಗಮಕ್ಕೆ ಸೂಚಿಸಿದರು.
ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ಮನೆ ಮನೆಗೆ ತಲುಪಿಸಿ ಅವರ ಆರೋಗ್ಯವನ್ನು ಕಾಪಾಡುವಂತೆ ಸೂಚಿಸಿದರು. ತಾಲೂಕು ಕೇಂದ್ರದಲ್ಲಿ ಎಲ್ಲ ಇಲಾಖೆಗಳನ್ನು ಸೂಕ್ತ ಸಿಬ್ಬಂದಿಯೊಂದಿಗೆ ಶೀಘ್ರದಲ್ಲಿ ಕಾರ್ಯಾರಂಭ ಮಾಡುವ ನಿರ್ಣಯ ಕೈಗೊಂಡ ಅವರು ನಂತರ, ಕೊರೊನಾ ವೈರಸ್ ನಿಗ್ರಹಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಶ್ರಮಪಡುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ಅಭಿನಂದನೆ ಸಲ್ಲಿಸಲಾಯಿತು.