ಯಾದಗಿರಿ: ಕೊರೊನಾ ರಣಕೇಕೆ ಮಧ್ಯೆ ಮುಖ್ಯ ಶಿಕ್ಷಕರೊಬ್ಬರಿಗೆ ಅದ್ದೂರಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸುವ ಮೂಲಕ ನೂರಾರು ಜನ ಗುಂಪು ಸೇರಿ ಕೊರೊನಾ ವೈರಸ್ ಭೀತಿ ಹುಟ್ಟಿಸಿದ ಘಟನೆ ಜಿಲ್ಲೆಯ ವಡಗೇರಾ ತಾಲ್ಲೂಕಿನ ನೀಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೀಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ನಡುವಿನಕೇರೆ ನಿವೃತ್ತಿಯಾಗಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಸಮಯದಲ್ಲಿ, ಅವರನ್ನು ಅದ್ದೂರಿಯಾಗಿ ಸನ್ಮಾನಿಸಿ ಸಾರೋಟದಲ್ಲಿ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗಿಯಾಗುವ ಮೂಲಕ ಸಾಮಾಜಿಕ ಅಂತರವಿಲ್ಲದೇ ಗುಂಪುಗುಂಪಾಗಿ ಮೆರವಣಿಗೆಯಲ್ಲಿ ಭಾಗಿಯಾಗಿ ಸರ್ಕಾರದ ಆದೇಶವನ್ನು ಉಲ್ಲಂಘಿಸಲಾಗಿದೆ.
ಕೊರೊನಾ ಬಿಕ್ಕಟ್ಟಿನ ಮಧ್ಯೆ ಇಷ್ಟೊಂದು ಅದ್ದೂರಿ ಬೀಳ್ಕೊಡುಗೆ ಸಮಾರಂಭ ಬೇಕಿತ್ತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕಳೆದೆರಡು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನೀಲಹಳ್ಳಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.
ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1500 ಗಡಿ ದಾಟಿದ್ದು, ಮುಖ್ಯ ಶಿಕ್ಷಕರ ಅದ್ದೂರಿ ಬೀಳ್ಕೊಡುಗೆ ಸಮಾರಂಭ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.